ಕೆಲಸ ಮಾಡದ ಅನಿತಾ ಕುಮಾರಸ್ವಾಮಿ, ನಿಖಿಲ್‌ ಮೇಲೆ ಮತದಾರರ ಮುನಿಸು, ಜೆಡಿಎಸ್ ಮತ ಸೆಳೆದ ಬಿಜೆಪಿ!

ಜೆಡಿಎಸ್ ಭದ್ರಕೋಟೆ ಎಂದೇ ಬಿಂಬಿಸಿಕೊಂಡಿದ್ದ ರಾಮನಗರ ಜಿಲ್ಲೆಯ ನಾಲ್ಕು ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಮೂರರಲ್ಲಿ ಸೋತಿದೆ. ಸೋತವರಲ್ಲಿ ರಾಮನಗರ ಕ್ಷೇತ್ರದಿಂದ ಜೆಡಿಎಸ್ ಮುಖ್ಯಸ್ಥ ಎಚ್.ಡಿ. ದೇವೇಗೌಡರ ಮೊಮ್ಮಗ ನಟ ನಿಖಿಲ್ ಕುಮಾರಸ್ವಾಮಿ ಕೂಡ ಇದ್ದಾರೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ವಿಜಯ ಸಾಧಿಸಿದ್ದಾರೆ. 
ಹೆಚ್ ಡಿ ಕುಮಾರಸ್ವಾಮಿ-ನಿಖಿಲ್ ಕುಮಾರಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ-ನಿಖಿಲ್ ಕುಮಾರಸ್ವಾಮಿ
Updated on

ಬೆಂಗಳೂರು: ಜೆಡಿಎಸ್ ಭದ್ರಕೋಟೆ ಎಂದೇ ಬಿಂಬಿಸಿಕೊಂಡಿದ್ದ ರಾಮನಗರ ಜಿಲ್ಲೆಯ ನಾಲ್ಕು ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಮೂರರಲ್ಲಿ ಸೋತಿದೆ. ಸೋತವರಲ್ಲಿ ರಾಮನಗರ ಕ್ಷೇತ್ರದಿಂದ ಜೆಡಿಎಸ್ ಮುಖ್ಯಸ್ಥ ಎಚ್.ಡಿ. ದೇವೇಗೌಡರ ಮೊಮ್ಮಗ ನಟ ನಿಖಿಲ್ ಕುಮಾರಸ್ವಾಮಿ ಕೂಡ ಇದ್ದಾರೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ವಿಜಯ ಸಾಧಿಸಿದ್ದಾರೆ. 

ಆದರೆ, ಚನ್ನಪಟ್ಟಣ ಕ್ಷೇತ್ರದಲ್ಲಿ ನಿಖಿಲ್‌ ಅವರ ತಂದೆ ಹಾಗೂ ಜೆಡಿಎಸ್‌ ಮುಖಂಡ ಎಚ್‌ಡಿ ಕುಮಾರಸ್ವಾಮಿ ಗೆಲುವು ಸಾಧಿಸಿರುವುದು ಜಿಲ್ಲೆಯಲ್ಲಿ ಪಕ್ಷಕ್ಕೆ ಇರುವ ಏಕೈಕ ಕ್ಷೇತ್ರವಾಗಿದೆ. ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ ಅವರನ್ನು ಹೆಚ್‌ಡಿ ಕುಮಾರಸ್ವಾಮಿ ಸೋಲಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಬಿಜೆಪಿ ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ ಅವರನ್ನು ಕಣಕ್ಕಿಳಿಸಿದ ನಂತರ ಮಹತ್ವ ಪಡೆದುಕೊಂಡ ಕನಕಪುರದಲ್ಲಿ ಡಿಕೆಶಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜಿಲ್ಲೆಯ ಮಾಗಡಿ ಕ್ಷೇತ್ರವನ್ನೂ ಜೆಡಿಎಸ್ ಕಳೆದುಕೊಂಡಿದೆ.

ಜೆಡಿಎಸ್ ಅಭ್ಯರ್ಥಿಗಳ ಸೋಲಿಗೆ ನಾನಾ ಕಾರಣಗಳನ್ನು ಹೇಳಲಾಗುತ್ತಿದೆ. ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಇರುವುದರಿಂದ ಈ ಬಾರಿ ಒಕ್ಕಲಿಗ ಸಮುದಾಯದ ಮತದಾರರು ಸಮುದಾಯದ ಪ್ರಬಲ ನಾಯಕನಿಗೆ ಅವಕಾಶ ನೀಡಬೇಕೆಂದು ಬಯಸಿದ್ದಾರೆ. ಎರಡನೆಯದಾಗಿ, ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ ಐದು ಭರವಸೆಗಳು ಸಹ ಪ್ರಮುಖ ಪಾತ್ರ ವಹಿಸಿವೆ.

ಕಾಂಗ್ರೆಸ್ ಪಾಲಾಗಿರುವ ದಲಿತ, ಕುರುಬ ಮತ್ತು ಅಲ್ಪಸಂಖ್ಯಾತರ ಮತಗಳು ಕ್ರೋಡೀಕರಣಗೊಂಡಿರುವುದು ಮತ್ತೊಂದು ಕಾರಣ. ಕಾಂಗ್ರೆಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಅವರಂತಹ ಈ ಸಮುದಾಯಗಳ ನಾಯಕರ ಪ್ರಬಲ ಪ್ರಾತಿನಿಧ್ಯವು ಪಕ್ಷದ ಪರವಾಗಿ ಕೆಲಸ ಮಾಡಿದೆ.

ರಾಮನಗರದಲ್ಲಿ ನಿಖಿಲ್ ಸೋಲಿನ ಬಗ್ಗೆ ಮತದಾರರು ಅವರ ತಾಯಿ ಅನಿತಾ ಕುಮಾರಸ್ವಾಮಿಯತ್ತ ಬೆರಳು ಮಾಡಿ ತೋರಿಸುತ್ತಿದ್ದಾರೆ. ಮಗನ ರಾಜಕೀಯ ಭವಿಷ್ಯವನ್ನು ರೂಪಿಸಲು ತಮ್ಮ ಸ್ಥಾನವನ್ನು 'ತ್ಯಾಗ' ಮಾಡುವ ಮೂಲಕ ಅವರನ್ನು 'ಬಲಿಪಶು' ಮಾಡಿದ್ದಾರೆ. ಅವರು ಕ್ಷೇತ್ರಕ್ಕೆ ಏನೂ ಮಾಡಿಲ್ಲ ಮತ್ತು ಮತದಾರರಿಗೆ ಸಂಪರ್ಕಕ್ಕೆ ಸಿಗುತ್ತಿರಲಿಲ್ಲ ಎಂದು ಆರೋಪಿಸಿದ್ದಾರೆ. ಪುತ್ರ ನಿಖಿಲ್‌ಗೆ ಮತ ಹಾಕದೆ ಮತದಾರರು ಆಕೆಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ನಿಖಿಲ್ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದನ್ನು ಇಲ್ಲಿ ಉಲ್ಲೇಖಿಸಬಹುದು. ಒಕ್ಕಲಿಗ ಸಮುದಾಯದಲ್ಲಿ ಹೆಚ್‌ಡಿಕೆ ಅವರ ಪ್ರಾಬಲ್ಯದಿಂದಾಗಿ ಚನ್ನಪಟ್ಟಣವನ್ನು ಪಕ್ಷ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ ಎಂದು ಹೇಳುತ್ತಾರೆ.

ಕ್ಷೇತ್ರದತ್ತ ಗಮನ ಹರಿಸಲು ಎಚ್‌ಡಿಕೆಗೆ ಸಾಧ್ಯವಾಗಲಿಲ್ಲ

ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಪ್ರವಾಸಕ್ಕೆ ಹೊರಟಿದ್ದರಿಂದ ಕ್ಷೇತ್ರದತ್ತ ಗಮನಹರಿಸಲು ಎಚ್ಡಿಕೆಗೂ ಸಾಧ್ಯವಾಗಿಲ್ಲ. ಇದಕ್ಕೆ ಪೂರಕವಾಗಿ ಬಿಜೆಪಿ ಕೂಡ ಮಾಗಡಿ ಮತ್ತು ರಾಮನಗರದಲ್ಲಿ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ತನ್ನ ಮತದಾರರ ತಳಹದಿಯನ್ನು ಸುಧಾರಿಸಿಕೊಳ್ಳುವ ಮೂಲಕ ಜೆಡಿಎಸ್‌ನ ಮತಗಳನ್ನು ತಿಂದು ಹಾಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com