ಬೆಂಗಳೂರು: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆ ಹಾಗೂ ರಾಜ್ಯಾದ್ಯಂತ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ ಮಾಡುವುದಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಗುರುವಾರ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಮುಖ್ಯಮಂತ್ರಿಯಾಗಿ ಹಾಗೂ ಹಣಕಾಸು ಸಚಿವರಾಗಿ ಇಂದು ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡಿಸಿ ಕುಮಾರಸ್ವಾಮಿ, ಬ್ರಾಹ್ಮಣ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರ ಅಭಿವೃದ್ಧಿಗಾಗಿ ನೆರವು ನೀಡಬೇಕೆಂದು ಈ ಸಮುದಾಯದ ಬಹು ದಿನಗಳ ಬೇಡಿಕೆಯಾಗಿದೆ. ಹೀಗಾಗಿ ನಮ್ಮ ಸರ್ಕಾರವು ಬ್ರಾಹ್ಮಣ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಿದೆ. ಅಲ್ಲದೆ, ಇದಕ್ಕೆ 25 ಕೋಟಿ ರೂ.ಗಳನ್ನು ಒದಗಿಸಲಿದೆ ಎಂದು ತಿಳಿಸಿದರು.
ರಾಜ್ಯಾದ್ಯಂತ ಆದಿ ಶಂಕರಾಚಾರ್ಯರ ಜಯಂತಿ ಆಚರಿಸುವುದಾಗಿಯೂ ಕುಮಾರಸ್ವಾಮಿ ತಿಳಿಸಿದ್ದಾರೆ. ಆದಿ ಶಂಕರಾಚಾರ್ಯರು ನಮ್ಮ ಧಾರ್ಮಿಕ ಪರಂಪರೆಯ ಮೇರು ವ್ಯಕ್ತಿಗಳಾಗಿದ್ದಾರೆ. ಇವರ ಗೌರವಾರ್ಥ ರಾಜ್ಯಾದ್ಯಂತ ಆದಿ ಶಂಕರಾಚಾರ್ಯರ ಜಯಂತಿಯನ್ನು ಆಚರಿಸಲಾಗುವುದು ಎಂದು ಬಜೆಟ್ ಮಂಡನೆ ವೇಳೆ ಸಿಎಂ ತಿಳಿಸಿದ್ದಾರೆ.