ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ
ಬೆಂಗಳೂರು: ಮುಖ್ಯಮಂತ್ರಿಗಳ ಮಾತೃಶ್ರೀ ಯೋಜನೆಯ ಸಹಾಯಧನಮಾಸಿಕ 1 ಸಾವಿರ ರೂ. ಗಳಿಂದ 2 ಸಾವಿರ ರೂ. ಗಳಿಗೆ ಹೆಚ್ಚಳ ಮಾಡಲಾಗಿದೆ. 2019 ಸಾಲಿನ ನವೆಂಬರ್ 1 ರಿಂದ ಜಾರಿಗೆ ಬರಲಿರುವ ಈ ಯೋಜನೆಗೆ ಈ ಸಾಲಿನ ಮುಂಗಡ ಪತ್ರದಲ್ಲಿ 470 ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿಯವರು ಪ್ರಕಟಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರಿಗೆ 500 ರೂ. ಹಾಗೂ ಸಹಾಯಕಿಯರಿಗೆ 250 ರೂ. ಗೌರವಧನ 2019 ರ ನವೆಂಬರ್ 1 ರಿಂದ ಜಾರಿಗೆ ಬರುವಂತೆ ಹೆಚ್ಚಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಲ್ಲ ಮಟ್ಟದ ಕರ್ಮಚಾರಿಗಳಿಗೆ ತರಬೇತಿ ನೀಡಲು ಬಳ್ಳಾರಿಯಲ್ಲಿ ರಾಜ್ಯಮಟ್ಟದ ತರಬೇತಿ ಕೇಂದ್ರ ಹಾಗೂ ಚಿತ್ರದುರ್ಗ, ಮೈಸೂರು, ಬೆಳಗಾವಿ ಮತ್ತು ಕಲಬುರಗಿಯಲ್ಲಿ ವಿಭಾಗ ಮಟ್ಟದ ತರಬೇತಿ ಕೇಂದ್ರ ಪ್ರಾರಂಭಿಸಲು 5 ಕೋಟಿ ರೂ. ಅನುದಾನ ಒದಗಿಸಲಾಗಿದೆ.
ನಗರ ಪ್ರದೇಶಗಳಲ್ಲಿ 100 ಹೊಸ ಅಂಗನವಾಡಿ ಕೇಂದ್ರ ಪ್ರಾರಂಭಿಸಲು ಕ್ರಮ, 1000 ಅಂಗನವಾಡಿ ಕಟ್ಟಡಗಳ ದುರಸ್ತಿ ಕಾಮಗಾರಿಗೆ 10 ಕೋಟಿರೂ. ಅನುದಾನ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೊಸ ಬಾಲಕಿಯರ ಬಾಲಮಂದಿರ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ ಬೆನ್ನುಹುರಿ ಅಪಘಾತಕ್ಕೆ ಒಳಗಾದವರ, ಹೆಮಿಪ್ಲೆಜಿಯಾ, ಮಲ್ಟಿಪಲ್ ಸ್ಲೆರೋಸಿಸ್, ಹಾಗೂ ಅಮಿಯೋಟ್ರೋಪಿಕ್ ಲ್ಯಾಟರಲ್ ಸ್ಲೆರೋಸಿಸ್ ಖಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ಪುನರ್ವಸತಿ ಕೇಂದ್ರ ಪ್ರಾರಂಭಿಸಲು 2 ಕೋಟಿ ರೂ. ಅನುದಾನ. 2000 ದೈಹಿಕ ವಿಕಲಚೇತನರಿಗೆ ಸ್ವಯಂಚಾಲಿತ ವಾಹನ (ರೆಟ್ರೋಫಿಟೆಡ್) ಉಚಿತವಾಗಿ ನೀಡಲು 15 ಕೋಟಿ ರೂ.ಅನುದಾನ ನೀಡಲಾಗುವುದು ಎಂದರು.
1000 ದಮನಿತ ಮಹಿಳೆಯರಿಗೆ ಉದ್ಯಮಶೀಲತೆ ಮತ್ತು ಕೌಶಲ್ಯ ತರಬೇತಿ ಹಾಗೂ ಉತ್ಪಾದನಾ ಘಟಕಗಳ ಸ್ಥಾಪನೆಗೆ ನೆರವು ನೀಡಲು 11.5 ಕೋಟಿ ರೂ. ಅನುದಾನ; ರಾಜ್ಯ ಸರ್ಕಾರದ ವಸತಿ ಯೋಜನೆಗಳಲ್ಲಿ ದಮನಿತ ಮಹಿಳೆಯರಿಗೆ ಆದ್ಯತೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿಳಿಸಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos