ರಾಜ್ಯ ಬಜೆಟ್

ಕರ್ನಾಟಕ ಬಜೆಟ್ 2020: ಸಾರ್ವಜನಿಕ ಸೇವೆಗಳು ಮತ್ತು ಆಡಳಿತ ಸುಧಾರಣೆಗೆ ಬಿಎಸ್ ವೈ ಕ್ರಮ

Srinivasamurthy VN

ಬೆಂಗಳೂರು: ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳನ್ನು ಮತ್ತಷ್ಟು ಸರಳೀಕರಣಗೊಳಿಸುವ ಉದ್ದೇಶದಿಂದ ಸಿಎಂ ಬಿಎಸ್ ವೈ ಯಡಿಯೂರಪ್ಪ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ.

ಪ್ರಮುಖವಾಗಿ ಸಾರ್ವಜನಿಕರಿಗೆ ಒದಗಿಸಲಾಗುವ ವಿವಿಧ ಪ್ರಮಾಣ ಪತ್ರಗಳನ್ನು ತಕ್ಷಣ ಒದಗಿಸುವಂತಹ ಸಿದ್ಧ-ಸೇವೆ ಯೋಜನೆಯ ಅನುಷ್ಠಾನಕ್ಕೆ ಬಿಎಸ್ ವೈ ಮೂರು ಕೋಟಿ ರೂ. ಅನುದಾನ ಮೀಸಲಿಟ್ಟಿದ್ದು, ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ರಾಜ್ಯದ ಎಲ್ಲ ಮಹಾನಗರ ಪಾಲಿಕೆಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ “ಜನ ಸೇವಕ” ಯೋಜನೆ ವಿಸ್ತರಣೆ ಮಾಡಲಾಗಿದೆ.

ಸರ್ಕಾರದ ಎಲ್ಲಾ ಸೇವೆಗಳನ್ನು ಒಂದೇ ಸೂರಿನಡಿ ತರಲು ಖಾಸಗಿ ಸಹಭಾಗಿತ್ವದೊಂದಿಗೆ ಪ್ರತಿ ಗ್ರಾಮದಲ್ಲಿ ಗ್ರಾಮ-1 ಕೇಂದ್ರಗಳ ಸ್ಥಾಪನೆ ಮಾಡಲಾಗುತ್ತಿದ್ದು, ರಾಜ್ಯದ ನಾಗರಿಕರು ಜಾಲತಾಣದ ಮೂಲಕ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಲು ಮತ್ತು ಮಾಹಿತಿ ಪಡೆಯಲು “ಮಾಹಿತಿ ಕಣಜ” ತಂತ್ರಾಂಶ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಸಕಾಲ ಯೋಜನೆಯ ಅನುಷ್ಠಾನದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳಿಗೆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ನೀಡಲು ಸರ್ಕಾರ ನಿರ್ಧರಿಸಿದೆ. ರಾಜ್ಯದ ಸರ್ಕಾರಿ ಜಮೀನುಗಳ ಸಂರಕ್ಷಣೆಗೆ ಸಮಿತಿ ರಚನೆ. ಬೆಂಗಳೂರು ಮತ್ತು ಇತರ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿನ ಭೂ ಕಬಳಿಕೆ ಮತ್ತು ಅವ್ಯವಹಾರದ ಬಗ್ಗೆ ಸಮಿತಿ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯ ಸರ್ಕಾರದ ಕೆಲವು ಕಚೇರಿಗಳನ್ನು ಹಂತ ಹಂತವಾಗಿ ಬೆಳಗಾವಿಯ ಸುವರ್ಣ ವಿಧಾನ ಸೌಧಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯದ 22.5 ಲಕ್ಷ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ಜ್ಯೋತಿ ಸಂಜೀವಿನಿ ಯೋಜನೆ ಮಾರ್ಪಡಿಸಿ, ಶಸ್ತ್ರ ಚಿಕಿತ್ಸಾ ವಿಧಾನಗಳಿಗೆ ನಗದುರಹಿತ ಚಿಕಿತ್ಸಾ ಸೌಲಭ್ಯ ನೀಡಲು ಅಂದಾಜು ವಾರ್ಷಿಕ ವೆಚ್ಚ 50 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ “ಜನಸ್ನೇಹಿ ಸಹಾಯ ವೇದಿಕೆ” ಯೋಜನೆಯನ್ನು ಬಲ ಪಡಿಸಲು ಐದು ಕೋಟಿ ರೂ. ನೆರವು ನೀಡಲಾಗಿದ್ದು, ಡಿಜಿಟಲ್ ಮಾಧ್ಯಮ ಜಾಹೀರಾತು ನೀತಿ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಹಿರಿಯ ಪತ್ರಕರ್ತರೂ ಆಗಿದ್ದ ಖ್ಯಾತ ಸಾಹಿತಿ ಡಾ|| ಡಿ.ವಿ. ಗುಂಡಪ್ಪ ಅವರ ಹೆಸರಿನಲ್ಲಿ ನಿಧಿ ಸ್ಥಾಪನೆ ಮಾಡಲಾಗುವುದು ಎಂದು ಬಿಎಸ್ ವೈ ಹೇಳಿದ್ದಾರೆ. ಅಲ್ಲದೆ “ಪೊಲೀಸ್ ಗೃಹ-2020” ಯೋಜನೆಯ ಕಾಮಗಾರಿ ಮುಂದುವರೆಸಲು 200 ಕೋಟಿ ರೂ. ಅನುದಾನ ನೀಡಲಾಗಿದ್ದು, ಬೆಂಗಳೂರು ಮಹಿಳೆಯರ ಸುರಕ್ಷತೆಗಾಗಿ ಅಭಿವೃದ್ಧಿ ಪಡಿಸಿರುವ ‘ಸುರಕ್ಷಾ ಆ್ಯಪ್’ ರಾಜ್ಯಾದ್ಯಂತ ವಿಸ್ತರಣೆ. ತುರ್ತು ಸ್ಪಂದನಾ ವಾಹನಗಳ ಮೂಲಕ ಮಹಿಳೆಯರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ. 

ಬೆಂಗಳೂರಿನ ಕಾನೂನು ಸುವ್ಯವಸ್ಥೆ ಕಾಪಾಡಲು ಪಿಂಕ್ ಹೊಯ್ಸಳ ಸೇರಿದಂತೆ 75 ಹೊಯ್ಸಳ ವಾಹನ ಹಾಗೂ ಇನ್ನಿತರೆ ಜಿಲ್ಲೆಗಳಿಗೆ ರಾಷ್ಟ್ರೀಯ ತುರ್ತು ಸ್ಪಂದನಾ ವ್ಯವಸ್ಥೆಯಡಿ (National Emergency Response System) ಬಳಸಲು 75 ವಾಹನ  ಖರೀದಿಗೆ ಕ್ರಮ ಕೈಗೊಳ್ಳಲಾಗಿದ್ದು, ವೈಟ್‍ಫೀಲ್ಡ್‍ನಲ್ಲಿ ಹೊಸದಾಗಿ ಸಂಚಾರ ಉಪ ವಿಭಾಗ ಸ್ಥಾಪನೆ ಮಾಡಲಾಗುತ್ತದೆ. ಪೊಲೀಸ್ ಶ್ವಾನದಳದ ಬಲವರ್ಧನೆಗೆ 2.5 ಕೋಟಿ ರೂ. ಅನುದಾನ ಮೀಸಲಿಡಲಾಗಿದ್ದು, ಕೆ-ಸೇಫ್ ಅಡಿಯಲ್ಲಿ 10 ಹೊಸ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಕ್ರಮ ಕ್ರಮ ಕೈಗೊಳ್ಳಲಾಗಿದೆ.

ಕಾರವಾರ ಬಂದರಿನಲ್ಲಿ ಸುಮಾರು 19 ಕೋಟಿ ರೂ.ಗಳ ಅಂದಾಜಿನಲ್ಲಿ ಅಗ್ನಿಶಾಮಕ ಉಪಕರಣ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗಿದ್ದು, ಪೊಲೀಸ್ ತರಬೇತಿ ಶಾಲೆಗಳಲ್ಲಿ ಹಾಗೂ ಸಿ.ಎ.ಆರ್., ಡಿ.ಎ.ಆರ್. ಕೇಂದ್ರ ಸ್ಥಾನಗಳಲ್ಲಿ ರಿಯಾಯಿತಿ ದರದಲ್ಲಿ ಮಹಿಳೆಯರಿಗೆ ಸ್ವಯಂ ರಕ್ಷಣೆ ತರಬೇತಿ ನೀಡಲು ಚಿಂತಿಸಲಾಗಿದೆ. ರಾಜ್ಯದ ರಸ್ತೆ ಸಾರಿಗೆ ನಿಗಮಗಳ ವತಿಯಿಂದ 2450 ಹೊಸ ಬಸ್‍ಗಳನ್ನು ಖರೀದಿಸಲು ಕ್ರಮ ಕೈಗೊಳ್ಳಲಾಗಿದೆ.  ಆಟೋ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರತಿ ವರ್ಷ ಪ್ರತಿ ಕುಟುಂಬಕ್ಕೆ 2000 ರೂ. ನೆರವು. 40 ಕೋಟಿ ರೂ. ಅನುದಾನ ಮೀಸಲಿಡಲಾಗಿದ್ದು, ಆಡಳಿತ ಸುಧಾರಣೆ ಹಾಗೂ ಸಾರ್ವಜನಿಕ ಸೇವೆಗಳ ವಲಯಕ್ಕೆ ಒಟ್ಟಾರೆ ನಿಗದಿ ಪಡಿಸಿದ ಅನುದಾನ- 10,194 ಕೋಟಿ ರೂ   ಮೀಸಲಿಡಲಾಗಿದೆ ಎಂದು ಬಿಎಸ್ ವೈ ಹೇಳಿದರು.

SCROLL FOR NEXT