ರಾಜ್ಯ ಬಜೆಟ್

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಾಂಗದವರ ಕಲ್ಯಾಣಕ್ಕೆ ಸಿಕ್ಕ ಬಜೆಟ್ ಘೋಷಣೆ ಹೀಗಿವೆ

Srinivas Rao BV

ಬೆಂಗಳೂರು: ಸಿಎಂ ಯಡಿಯೂರಪ್ಪ 2020-21 ನೇ ಸಾಲಿನ ಬಜೆಟ್ ಮಂಡಿಸುವ ಮೂಲಕ ತಮ್ಮ 7 ನೇ ಬಜೆಟ್ ಮಂಡನೆ ಮಾಡಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಾಂಗದ ಕಲ್ಯಾಣಕ್ಕೆ ಭರಪೂರ ಅನುದಾನ ಘೋಷಣೆ ಮಾಡಿದ್ದಾರೆ.

ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿಗೆ ಹೆಚ್ಚು ಒತ್ತು ನೀಡಿರುವ ಸಿಎಂ ಯಡಿಯೂರಪ್ಪ  ಎಸ್‍ಸಿಎಸ್‍ಪಿ/ ಟಿಎಸ್‍ಪಿ ಅಡಿ 26,930 ಕೋಟಿ ರೂ. ಅನುದಾನ ನಿಗದಿ ಮಾಡಿದ್ದು, ಇದು ನಿಯಮಾನುಸಾರ ಹಂಚಿಕೆ ಮಾಡಬೇಕಾದ ಮೊತ್ತಕ್ಕಿಂತ ಹೆಚ್ಚಾಗಿದೆ. 

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಾಂಗ ಹಾಗೂ ಇತರ ಜನಾಂಗದ ಕಲ್ಯಾಣಕ್ಕಾಗಿ ಬಜೆಟ್ ಘೋಷಣೆಗಳು ಹೀಗಿವೆ

  1. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಮೂಲಕ ವಾಹನ ಚಾಲನಾ ತರಬೇತಿ
  2. ವಿವಿಧ ಪ್ಯಾರಾಮೆಡಿಕಲ್ ಸರ್ಟಿಫಿಕೇಟ್ ಕೋರ್ಸುಗಳೊಂದಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಸಣ್ಣ ಸರಕು ಸಾಗಾಣಿಕೆ ವಾಹನ ಖರೀದಿಗೆ ಸಾಲದ ಸೌಲಭ್ಯ ನೀಡಲು ಕ್ರಮ.
  3. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ನಿರ್ವಹಿಸುತ್ತಿರುವ ಸಹಕಾರ ಸಂಘಗಳಿಗೆ ಆರ್ಥಿಕ ಚಟುವಟಿಕೆಗಳಿಗಾಗಿ ನೀಡುವ ಷೇರು ಬಂಡವಾಳ ದ್ವಿಗುಣಗೊಳಿಸಿ 20 ಲಕ್ಷ ರೂ. ಗಳಿಗೆ ಹೆಚ್ಚಳ.
  4. ಪ್ರತಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ, ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಇವರ ಹೆಸರಿನಲ್ಲಿ ಒಂದು ಲಕ್ಷ ರೂ. ನಗದು ಪ್ರಶಸ್ತಿ ನೀಡಲು ಕ್ರಮ. 60 ಲಕ್ಷ ರೂ. ಅನುದಾನ.
  5. ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬುಡಕಟ್ಟು ಜನರ ಪಾರಂಪರಿಕ ವೈದ್ಯಪದ್ಧತಿ ಮತ್ತು ಆಚರಣೆಗಳ ದಾಖಲೀಕರಣ ಮತ್ತು ಆಯ್ದ ಔಷಧಿಗಳ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಎರಡು ಕೋಟಿ ರೂ. ಅನುದಾನ.
  6. ಅಲೆಮಾರಿ/ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 78 ಕೋಟಿ ರೂ. ಅನುದಾನ.
  7. ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ವಿವಿಧ ನಿಗಮಗಳಿಗೆ 125 ಕೋಟಿ ರೂ. ಅನುದಾನ.
  8. ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿರುವ ಅಧಿಸೂಚಿತವಲ್ಲದ ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ 200 ಕೋಟಿ ರೂ. ಅನುದಾನ
  9. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಐದು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪದವಿ ಪೂರ್ವ ಕಾಲೇಜನ್ನಾಗಿ ಉನ್ನತೀಕರಿಸಲು ಕ್ರಮ.
  10. ಕ್ರೈಸ್ತ ಸಮುದಾಯದವರ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂ. ಅನುದಾನ.
SCROLL FOR NEXT