ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ತಾವು ಇಂದು ಮಂಡಿಸಿದ ಕರ್ನಾಟಕ ಬಜೆಟ್ 2022ರಲ್ಲಿ ಮುಜರಾಯಿ ಇಲಾಖೆಗೆ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ.
ರಾಜ್ಯ ಬಜೆಟ್ ನಲ್ಲಿ ಹಿಂದೂ ಧಾರ್ಮಿಕ ದತ್ತಿ ಮತ್ತು ಧರ್ಮದಾಯ (ಮುಜರಾಯಿ) ಇಲಾಖೆಗೆ ಹಲವು ಪ್ರಮುಖ ಘೋಷಣೆಗಳನ್ನು ವಿತ್ತ ಖಾತೆಯನ್ನೂ ಹೊಂದಿರುವ ಸಿಎಂ ಬೊಮ್ಮಾಯಿಯವರು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ದೇವಾಲಯಗಳ ಸಮಗ್ರ ಅಭಿವೃದ್ಧಿಯ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಆನೆ ಬಲ ತುಂಬಿದ ಬಜೆಟ್ ಇದಾಗಿದೆ ಎಂದು ಬೊಮ್ಮಾಯಿ ಹೇಳಿದ್ದು, ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂ ಸಹಾಯಧನ ಘೋಷಣೆ ಮಾಡಿದ್ದಾರೆ. ಇದರಿಂದ ಸುಮಾರು 30 ಸಾವಿರ ಯಾತ್ರಾರ್ಥಿಗಳಿಗೆ ನೆರವಾಗಲಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಕರ್ನಾಟಕ ಬಜೆಟ್ 2022: ತೋಟಗಾರಿಕೆಯಲ್ಲಿ ತಂತ್ರಜ್ಞಾನ ಬಳಕೆಗೆ ಅನುದಾನ, ಕೌಶಲ್ಯಾಭಿವೃದ್ದಿ ಮತ್ತು ಉದ್ಯೋಗ ಸೃಷ್ಚಿಗೆ ಒತ್ತು
ಉಳಿದಂತೆ ಆಂಧ್ರ ಪ್ರದೇಶದಲ್ಲಿರುವ ಶ್ರೀಶೈಲದಲ್ಲಿ ಕರ್ನಾಟಕದ ಯಾತ್ರಿಗಳ ಅನುಕೂಲಕ್ಕಾಗಿ ಯಾತ್ರಿನಿವಾಸ ಸಂಕೀರ್ಣ ನಿರ್ಮಾಣಕ್ಕೆ ಎರಡು ಹಂತದಲ್ಲಿ 85 ಕೋಟಿ ರೂಪಾಯಿಗಳನ್ನು ಘೋಷಿಸಿದ್ದು, ಮೊದಲ ಹಂತದಲ್ಲಿ 45 ಕೋಟಿ ರೂಪಾಯಿಗಳನ್ನು ನೀಡಲಾಗಿದೆ. ಅಂತೆಯೇ ಪಂಡರಾಪುರದಲ್ಲೂ ಅತಿಥಿಗೃಹವನ್ನು ಅಭಿವೃದ್ದಿ ಪಡಿಸಲು ಬಜೆಟ್ ನಲ್ಲಿ ಘೋಷಿಸಲಾಗಿದೆ.
ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಬೇಕೆಂಬ ಬೇಡಿಕೆ ಬಹುಕಾಲದಿಂದ ಕೇಳಿ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಾಲಯಗಳಿಗೆ ಸ್ವಾಯತ್ತತೆ ನೀಡಿ, ಅಭಿವೃದ್ದಿ ಕಾಮಗಾರಿಗಳ ವಿವೇಚನೆಯನ್ನು ದೇವಾಲಯಗಳಿಗೆ ಪ್ರತ್ಯಾಯೋಜಿಸಲು ಕಾನೂನು ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಘೋಷನೆ ನೀಡಲಾಗಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯ ದೇಗಲಗಳ ಸ್ವಾಯತ್ತತೆ ಹಾಗೂ ದೇಗುಲಗಳ ಅಭಿವೃದ್ಧಿಗೆ 168 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದ್ದು, ಕೊಪ್ಪಳದ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ 100 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ.
ರಿಯಾಯಿತಿ ದರದಲ್ಲಿ ಯಾತ್ರಾ ಪ್ಯಾಕೇಜ್
ಇದೇ ವೇಳೆ ಪುಣ್ಯಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಪ್ರವಾಸ ಕೈಗೊಳ್ಳಲು ಅನುಕೂಲವಾಗುವಂತೆ ಕೆ.ಎಸ್.ಟಿ.ಡಿ.ಸಿ ವತಿಯಿಂದ ರಿಯಾಯಿತಿ ದರದಲ್ಲಿ ಪ್ಯಾಕೇಜುಗಳನ್ನು ರೂಪಿಸಲಾಗುವುದು. ಧರ್ಮಸ್ಥಳ, ಕುಕ್ಕೆ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ಮರವತ್ತೂರುಗೆ ಪ್ಯಾಕೇಜ್ ಟ್ರಿಪ್ ಸೇವೆ ಆರಂಭಿಸಲಾಗುತ್ತದೆ. ಚಾಮುಂಡಿ ಬೆಟ್ಟ, ಮುಳ್ಳಯನಗಿರಿ, ನಂದಿಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಿದೆ. ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ದಿಗೆ 100 ಕೋಟಿ ರೂಪಾಯಿಗಳ ಅನುದಾನ ನೀಡಲಾಗಿದೆ. ಬಹುದಿನಗಳ ಬೇಡಿಕೆಯಾಗಿದ್ದ ತಸ್ತೀಕ್ ಹಣವನ್ನು 48 ಸಾವಿರಗಳಿಂದ 60 ಸಾವಿರಗಳಿಗೆ ಹೆಚ್ಚಿಸಲಾಗಿದೆ.
ಇದನ್ನೂ ಓದಿ: ರಾಜ್ಯ ಬಜೆಟ್ 2022: ದುರ್ಬಲ ವರ್ಗಗಳ ಸಬಲೀಕರಣಕ್ಕೆ 800 ಕೋಟಿ, ಅಬ್ದುಲ್ ಕಲಾಂ, ನಾರಾಯಣ ಗುರು ಹೆಸರಲ್ಲಿ ವಸತಿ ಶಾಲೆ!
ಪ್ರಧಾನಿ ನರೆಂದ್ರ ಮೋದಿ ಡಿಜಿಟಲ್ ಇಂಡಿಯಾ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಇಲಾಖೆಯ ದೇವಾಲಯಗಳಲ್ಲಿ ಪಾರದರ್ಶಕತೆ, ದೇವಾಲಯದ ಹಣಕಾಸಿನ ಉತ್ತರದಾಯಿತ್ವ, ಡಿಜಿಟಲ್ ಪೇಮೆಂಟ್ಸ್ ಸೌಲಭ್ಯ, ಇತಿಹಾಸ, ಸೇವಾ ವಿವರ, ಉತ್ಸವ ಇತ್ಯಾದಿ ಮಾಹಿತಿಗಳನ್ನು ಆನ್ಲೈನ್ ಮುಖಾಂತರ ಭಕ್ತಾಧಿಗಳಿಗೆ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಐ.ಟಿ.ಎಂ.ಎಸ್ (Integrated Temple Management System) ತಂತ್ರಾಂಶ ಅನುಷ್ಠಾನ ಮಾಡಲಾಗುತ್ತದೆ ಎಂದು ಬೊಮ್ಮಾಯಿ ಹೇಳಿದರು.