ಮುಂಬೈ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹು ನಿರೀಕ್ಷಿತ ಸರ್ಕಾರ 'ದರ್ಬಾರ್' ಚಿತ್ರಕರಣ ವೇಳೆ ಕಲ್ಲು ತೂರಾಟ ನಡೆದಿದ್ದು, ಚಿತ್ರೀಕರಣ ತಾತ್ಕಾಲಿಕವಾಗಿ ಸ್ಥಗಿತವಾಗಿದೆ ಎಂದು ತಿಳಿದುಬಂದಿದೆ.
ಮುಂಬೈನಲ್ಲಿ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಚಿತ್ರೀಕರಣ ಸ್ಥಳಕ್ಕೆ ಕೆಲ ಸ್ಥಳೀಯ ಕಾಲೇಜು ವಿದ್ಯಾರ್ಥಿಗಳು ಬಂದಿದ್ದು, ಚಿತ್ರೀಕರಣವನ್ನು ತಮ್ಮ ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಿಸಿಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಚಿತ್ರತಂಡ ವಿಡಿಯೋ ಮಾಡಿಕೊಳ್ಳದಂತೆ ವಿದ್ಯಾರ್ಥಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಇದರಿಂದ ಕೆರಳಿದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು ಉದ್ರಿಕ್ತಗೊಂಡ ವಿದ್ಯಾರ್ಥಿಗಳ ಗುಂಪು ಶೂಟಿಂಗ್ ಸೆಟ್ ನ ಮೇಲೆ ಕಲ್ಲು ತುರಾಟ ನಡೆಸಿದ್ದಾರೆ. ಈ ವೇಳೆ ಚಿತ್ರದ ನಿರ್ದೇಶಕ ಎ.ಆರ್. ಮುರುಗದಾಸ್ ಕಾಲೇಜಿನ ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ.
ಅಲ್ಲದೇ ಶೂಟಿಂಗ್ ಸ್ಥಳವನ್ನು ಸ್ಥಳಾಂತರ ಮಾಡಿದ್ದಾರೆ ಎನ್ನಲಾಗಿದೆ. ಇದೀಗ ದರ್ಬಾರ್ ಚಿತ್ರದ ಚಿತ್ರೀಕರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ.
ದರ್ಬಾರ್ ಚಿತ್ರದಲ್ಲಿ ರಜನಿಕಾಂತ್ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಇದೇ ಮೊದಲ ಬಾರಿಗೆ ಎ.ಆರ್.ಮುರುಗದಾಸ್ ಹಾಗೂ ರಜನಿಕಾಂತ್ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ. ರಜನಿಕಾಂತ್ ಜೊತೆ ಚಂದ್ರಮುಖಿ, ಕುಸೇಲನ್ ಚಿತ್ರಗಳಲ್ಲಿ ನಟಿಸಿದ್ದ ನಟಿ ನಯನತಾರ ಮತ್ತೊಮ್ಮೆ ಜೋಡಿಯಾಗಿದ್ದಾರೆ.
ಇತ್ತೀಚೆಗಷ್ಟೇ ಇದೇ ಚಿತ್ರದ ಕೆಲ ಫೋಟೋಗಳು ಮತ್ತು ಚಿತ್ರೀಕರಣದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆಗಿದ್ದವು. ಹೀಗಾಗಿ ಚಿತ್ರ ತಂಡ ಈ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ, ಚಿತ್ರತಂಡದ ಸಿಬ್ಬಂದಿಗಳಿಗೆ ಈ ಕುರಿತು ಎಚ್ಚರಿಕೆ ಕೂಡ ನೀಡಲಾಗಿತ್ತು. ಈ ವಿಚಾರ ಇನ್ನೂ ಹಸಿರಾಗಿರುವಾಗಲೇ ಅಂತಹುದೇ ಮತ್ತೊಂದು ಘಟನೆ ಮುಂಬೈನಲ್ಲಿ ನಡೆದಿದೆ.