ಬೆಂಗಳೂರು: ದಾವಣಗೆರೆ ಸಮೀಪ ನಡೆದ ಭೀಕರ ಅಪಘಾತದಲ್ಲಿ ಕನ್ನಡ ಕಿರುತೆರೆಯ ಖ್ಯಾತ ನಿರೂಪಕ ಚಂದನ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಭಾಷೆಯ ಮೇಲಿನ ಹಿಡಿತ ಹಾಗೂ ಅಚ್ಚ ಕನ್ನಡದಲ್ಲಿಯೇ ಮಾತನಾಡುತ್ತಾ ಸಾಕಷ್ಟು ಅಭಿಮಾನಿಗಳನ್ನು ಗಳಿಸಿದ್ದ ನಿರೂಪಕ ಚಂದನ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಅಪಘಾತವಾಗಿ ಚಂದನ್, ಗಾಯಕಿ ಸಂತೋಷಿ ಕಾರಿನಲ್ಲಿದ್ದ ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ನಿರೂಪಕ ಚಂದನ್, ಗಾಯಕಿ ಸಂತೋಷಿ, ಕಿರುತೆರೆ ಕಲಾವಿದರಾದ ರಾಮು ಮತ್ತು ಸುನೀತಾ ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದರು. ಕಾರಿನಲ್ಲಿ ತೆರಳುತ್ತಿದ್ದಾಗ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಎಂಬಲ್ಲಿ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದಿದೆ.
ಪರಿಣಾಮ ಕಾರು ಚಾಲನೆ ಮಾಡುತ್ತಿದ್ದ ಚಂದನ್ ಹಾಗೂ ಪಕ್ಕದಲ್ಲಿ ಕುಳಿತಿದ್ದ ಗಾಯಕಿ ಸಂತೋಷಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಕಿರುತೆರೆ ಕಲಾವಿದರಾದ ರಾಮು ಮತ್ತು ಸುನೀತಾ ಎಂದು ಗುರುತಿಸಲಾಗಿದ್ದು, ಇವರನ್ನು ದಾವಣಗೆರೆಯಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಂದನ್ ಮತ್ತು ಆತನ ಸ್ನೇಹಿತರು ಬೆಂಗಳೂರು ಕಡೆಯಿಂದ ಹುಬ್ಬಳ್ಳಿಗೆ ಹೋಗುತ್ತಿದ್ದರು. ಈ ವೇಳೆ ರಸ್ತೆ ಪಕ್ಕದಲ್ಲಿ ನಿಂತ ಲಾರಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಜರುಗಿದೆ. ಹರಿಹರದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಚಂದನ್ ಸಾವಿನ ವಿಚಾರಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ಗಣ್ಯರು ಕಂಬನಿ ಮಿಡಿದಿದ್ದಾರೆ.