ಮೈಸೂರು: ಸಾಹಸಸಿಂಹ ದಿವಂಗತ. ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಮತ್ತೊಮ್ಮೆ ಅಡಚಣೆ ಉಂಟಾಗಿದೆ ನ್ಯಾಯಾಲಯದಿಂದಲೇ ಹಸಿರು ನಿಶಾನೆ ದೊರಕಿದ್ದರೂ ರೈತರಿಂದ ಅಡ್ಡಿ ಎದುರಾಗಿದೆ.
ಸ್ಮಾರಕ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದ ರೈತರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಹೈಕೋರ್ಟ್ನಲ್ಲಿದ್ದ ಪ್ರಕರಣ ಇತ್ಯರ್ಥವಾಗಿ, ಸ್ಮಾರಕ ನಿರ್ಮಿಸುವಂತೆ ನ್ಯಾಯಾಲಯ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ತಾಲೂಕಿನ ಜಯಪುರ ಹೋಬಳಿ ಹಾಲಾಳು ಗ್ರಾಮದ ಸರ್ವೆ ನಂ.8ರಲ್ಲಿ ಸ್ಮಾರಕ ನಿರ್ಮಾಣ ಕಾಮಗಾರಿ ಆರಂಭಗೊಂಡಿತ್ತು.
ಆದರೆ, ಮಂಗಳವಾರ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕಾಗಮಿಸಿದ ಕೆಲ ಸ್ಥಳೀಯ ರೈತರು ಕಾಮಗಾರಿಗೆ ಅಡ್ಡಿಯುಂಟು ಮಾಡಿದ್ದಾರೆ. ಸ್ಮಾರಕ ನಿರ್ಮಾಣ ಕಾರ್ಯಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ತಾವು ಉನ್ನತ ನ್ಯಾಯಾಲಯಕ್ಕೆ ಪ್ರಕರಣವನ್ನು ಕೊಂಡೊಯ್ಯಲು ಅವಕಾಶವಿದೆ ಎಂದು ರೈತರು ಹೇಳಿದ್ದಾರೆ.
ಸ್ಮಾರಕ ನಿರ್ಮಾಣಕ್ಕೆ ಸರ್ಕಾರ 2017ರಲ್ಲಿ ಹಾಲಾಳು ಗ್ರಾಮದ ಮೈಸೂರು- ಮಾನಂದವಾಡಿ ರಸ್ತೆಯಲ್ಲಿ 5 ಎಕರೆ ಭೂಮಿ ಗುರುತಿಸಿತ್ತು.. ಈ ಸಂಬಂಧ ಸರ್ಕಾರದ ನಿರ್ಧಾರ ಪ್ರಶ್ನಿಸಿ ರೈತರು ಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ ಸ್ಥಳೀಯ ನ್ಯಾಯಾಲಯ ತಡೆ ಯಾಜ್ಞೆ ನೀಡಿತ್ತು. ಕೋರ್ಟ್ನಿಂದ ತಡೆಯಾಜ್ಞೆ ತಂದವರು ನಾಲ್ಕು ಬಾರಿ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಹೈಕೋರ್ಟ್, ತಡೆಯಾಜ್ಞೆ ತೆರವುಗೊಳಿಸಿ ಸ್ಮಾರಕ ನಿರ್ಮಾಣಕ್ಕೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಜೂನ್ 1 ರಂದು ಸ್ಮಾರಕ ನಿರ್ಮಾಣ ಕಾರ್ಯ ಆರಂಭವಾಗಿತ್ತು.
ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಷ್ಣುವರ್ಧನ್ ಅಳಿಯ ಅನಿರುದ್ದ ಇನ್ನೊಂದು ವಾರದಲ್ಲಿ ಸ್ಮಾರಕ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ, ಮುಖ್ಯ ಕಾರ್ಯದರ್ಶಿಗಳನ್ನು ಭೇಟಿಯಾಗಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ. ವಿಷ್ಣು ಪ್ರತಿಷ್ಠಾನದ ಪರವಾಗಿ ಕೋರ್ಟ್ ತೀರ್ಪು ನೀಡಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos