ಸಿನಿಮಾ ಸುದ್ದಿ

ನಟ ಯಶ್‍ರನ್ನು ನೋಡುವ ಆತುರದಲ್ಲಿ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ಅಭಿಮಾನಿ ಸ್ಥಿತಿ ಗಂಭೀರ!

Vishwanath S

ಗದಗ: ನಟ ಯಶ್ ಹುಟ್ಟುಹಬ್ಬಕ್ಕೆ ಶುಭಕೋರಲು ಕಟೌಟ್ ಕಟ್ಟುವಾಗ ಕರೆಂಟ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆಯ ಬೆನ್ನಲ್ಲೇ ಮತ್ತೊಂದು ದುರ್ಘಟನೆ ಸಂಭವಿಸಿದೆ. 

ಗದಗಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ವಾಪಸಾಗುತ್ತಿದ್ದರು. ಈ ವೇಳೆ ಯಶ್ ನೋಡಲು ಅಭಿಮಾನಿಯೊಬ್ಬ ವೇಗವಾಗಿ ಬಂದು ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು ಪರಿಣಾಮ ಯುವಕನ ಸ್ಥಿತಿ ಗಂಭೀರವಾಗಿದೆ.

ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ 32 ವರ್ಷದ ನಿಖಿಲ್ ಯಶ್ ರನ್ನು ನೋಡುವ ಹಂಬಲದಲ್ಲಿ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದ್ದರು. ಗಂಭೀರವಾಗಿ ಗಾಯಗೊಂಡ ಸವಾರನನ್ನು ಪೊಲೀಸ್ ವಾಹನದಲ್ಲೇ ಕರೆದೊಯ್ದು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ಗಾಯಾಳು ಯುವಕನ ಸ್ಥಿತಿ ಗಂಭೀರವಾಗಿದೆ. ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಕಳೆದ ರಾತ್ರಿ ಕಟೌಟ್ ಕಟ್ಟುವಾಗ ವಿದ್ಯುತ್​ ಶಾಕ್​ನಿಂದ ಅಭಿಮಾನಿಗಳಾದ ಹನುಮಂತ ಹರಿಜನ (21), ಮುರಳಿ ನಡವಿನಮನಿ (20) ಮತ್ತು ನವೀನ್ (19) ಮೃತಪಟ್ಟಿದ್ದು ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. 

SCROLL FOR NEXT