ಬೆಂಗಳೂರು: ಇತ್ತೀಚಿಗೆ ನಟಿ ಹಾಗೂ ಬಿಗ್ಬಾಸ್ನ ಮಾಜಿ ಸ್ಪರ್ಧಿ ಕೃಷಿ ತಾಪಂಡ ಅವರ ಆತ್ಮೀಯ ಗೆಳಯ, ಉದ್ಯಮಿ ವೈಶಾಖ್ ಆತ್ಮಹತ್ಯೆ ಪ್ರಕರಣದ ನಂತರ ಸ್ಯಾಂಡಲ್ವುಡ್ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಹಲವು ರೀತಿಯ ಊಹಾಪೋಹಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದವು.
ಈ ಘಟನೆಗೂ ಕೆಲವು ತಿಂಗಳ ಹಿಂದೆ ಉದ್ಯಮಿ ಅರವಿಂದ್ ರೆಡ್ಡಿ ಅವರು ನಟಿ ಕೃಷಿ ತಾಪಂಡ ಅವರ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಬಳಿಕ ಇಬ್ಬರೂ ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡಿದ್ದರು.
ಇದೀಗ ವೈಶಾಖ್ ಆತ್ಮಹತ್ಯೆ ಪ್ರಕರಣದ ನಂತರ ಮೊದಲ ಬಾರಿ ಮೌನ ಮುರಿದಿರುವ ಸ್ಯಾಂಡಲ್ವುಡ್ ನಿರ್ಮಾಪಕ ಅರವಿಂದ್ ರೆಡ್ಡಿ ಅವರು, ಈ ವಿಚಾರದಲ್ಲಿ ಇನ್ನು ಮುಂದೆ ಮಾತನಾಡಲು ಇಷ್ಟಪಡುವುದಿಲ್ಲ ಎಂದು ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ರೆಡ್ಡಿ, ತಮ್ಮ ಹಾಗೂ ನಟಿ ಕೃಷಿ ತಾಪಂಡ ಕುರಿತು ನಡೆಯುತ್ತಿರುವ ಚರ್ಚೆಗಳ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಅವರ ಕುರಿತ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.
ವೈರಲ್ ಆಗುತ್ತಿರುವ ವಿಡಿಯೋದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅರವಿಂದ್ ರೆಡ್ಡಿ, ಕೃಷಿ ತಾಪಂಡ ನನ್ನ ಜೀವನಕ್ಕೆ ಬರೋದು ಬೇಡ. ನಾನು ಬದುಕಬೇಕು ಅಂತ ಇದ್ದೇನೆ, ಸಾಯೋದಕ್ಕೆ ಇಷ್ಟ ಇಲ್ಲ. ಈಗ ನಾನು ಬದುಕಿದ್ದೇ ನನಗೆ ಖುಷಿ. ಈ ವಿಷಯದ ಬಗ್ಗೆ ನಾನು ಯಾಕೆ ಮಾತಾಡಬೇಕು? ಎಂದು ಪ್ರಶ್ನಿಸಿದ್ದಾರೆ.
ಅಲ್ಲದೆ, ಕೃಷಿ ತಾಪಂಡ ಯಾರು ಅಂತ ನನಗೆ ಗೊತ್ತೇ ಇಲ್ಲ. ಅವರನ್ನು ನಾನು ಮರೆತಿದ್ದೇನೆ. ಈ ಪ್ರಕರಣ ಈಗ ಕೋರ್ಟ್ನಲ್ಲಿದೆ. ಆದ್ದರಿಂದ ಈ ಬಗ್ಗೆ ನಾನು ಇನ್ನು ಮುಂದೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ.