ಸ್ಯಾಂಡಲ್ ವುಡ್ ನಟರಾದ ವಿಜಯ್ ರಾಘವೇಂದ್ರ ಮತ್ತು ಶ್ರೀಮುರಳಿ ಅವರ ತಾಯಿ ನಿಧನರಾಗಿದ್ದಾರೆ. ಹಿರಿಯ ನಿರ್ಮಾಪಕ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಎಸ್.ಎ. ಚಿನ್ನೇಗೌಡ ಅವರ ಪತ್ನಿ ಜಯಮ್ಮ ಇಂದು ಬೆಳಗ್ಗೆ ಅಸುನೀಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇವರ ನಿಧನಕ್ಕೆ ಸ್ಯಾಂಡಲ್ವುಡ್ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪತಿ ಚಿನ್ನೇಗೌಡರು ಸ್ಯಾಂಡಲ್ವುಡ್ನ ಯಶಸ್ವಿ ನಿರ್ಮಾಪಕರಾಗಿ ಗುರುತಿಸಿಕೊಳ್ಳಲು ಹಾಗೂ ಇಬ್ಬರು ಗಂಡುಮಕ್ಕಳು ಚಿತ್ರರಂಗದಲ್ಲಿ ಸ್ಟಾರ್ ನಟರಾಗಿ ಬೆಳೆಯಲು ಜಯಮ್ಮ ಅವರ ಪ್ರೋತ್ಸಾಹ, ಬೆಂಬಲ ಅಪಾರವಾಗಿತ್ತು. ಅವರೂ ಕೂಡಾ ನಿರ್ಮಾಪಕಿಯಾಗಿದ್ದು' ಸೇವಂತಿ ಸೇವಂತಿ' ಸಿನಿಮಾ ನಿರ್ಮಿಸಿದ್ದಾರೆ.
2023ರಲ್ಲಿ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟಿದ್ದರು. ಇದರಿಂದ ಹೊರಬಂದಿದ್ದ ಕುಟುಂಬಕ್ಕೆ ಇದೀಗ ಜಯಮ್ಮ ಸಾವು ಅಪಾರ ನೋವುಂಟು ಮಾಡಿದೆ.