ನವದೆಹಲಿ: ಶೂ ಜಾಹೀರಾತಿನಲ್ಲಿ ವಿಷ್ಣು ವೇಷಧಾರಿಯಾಗಿ ಕಾಣಿಸಿಕೊಂಡ ವಿವಾದಕ್ಕೆ ಸಂಬಂಧಿಸಿದಂತೆ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ದೋನಿ ಅವರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಗುರುವಾರ ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಧೋನಿ ಅವರು ವಿಷ್ಣು ಅವತಾರದಲ್ಲಿ ಫೋಸ್ ನೀಡಿರುವುದು ಯಾವುದೇ ಧಾರ್ಮಿಕ ಭಾವನೆಗೆ ಧಕ್ಕೆ ತಂದಿಲ್ಲ ಎಂದು ಸುಪ್ರೀಂ ಪೀಠ ತನ್ನ ಆದೇಶದಲ್ಲಿ ತಿಳಿಸಿದೆ. ಇದರಿಂದ ಧೋನಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ
ಬ್ಯುಸಿನೆಸ್ ಟುಡೆ ಇಂಡಿಯಾ ನಿಯತಕಾಲಿಕೆಯ 2013ರ ಏಪ್ರಿಲ್ ಸಂಚಿಕೆಯಲ್ಲಿ ಧೋನಿ, ವಿಷ್ಣುವಿನ ವೇಷಧಾರಿಯಾಗಿ ರಿಬಾಕ್ ಕಂಪೆನಿಯ ಶೂಗಳನ್ನು ಕೈಯಲ್ಲಿ ಹಿಡಿದು ಜಾಹೀರಾತು ನೀಡಿದ್ದರು. ಇದರಿಂದ ಹಿಂದೂಗಳ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಹಿರೇಮಠ್ ಅವರು ಖಾಸಗಿ ದೂರು ದಾಖಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್, ಧೋನಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸೂಚನೆ ನೀಡಿತ್ತು. ತನ್ನ ವಿರುದ್ಧದ ಕ್ರಿಮಿನಲ್ ಕೇಸ್ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಧೋನಿ ಸಲ್ಲಿಸಿದ್ದ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿತ್ತು. ಬಳಿಕ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಹಾಗೂ ತನ್ನ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಬೇಕೆಂದು ಕೋರಿ ಧೋನಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.