ಕೊಚ್ಚಿ: 2013ರ ಐಪಿಎಲ್ ಪಂದ್ಯಾವಳಿಯಲ್ಲಿ ಸ್ಪಾಟ್ ಫಿಕ್ಸಿಂಗ್ ನಲ್ಲಿ ತೊಡಗಿದ್ದ ಆರೋಪದ ಮೇಲೆ ಕ್ರಿಕೆಟರ್ ಶ್ರೀಶಾಂತ್ ಮೇಲೆ ಹೇರಲಾಗಿದ್ದು ಜೀವಮಾನ ನಿಷೇಧವನ್ನು ಹಿಂಪಡೆಯುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಗೆ ಕೇರಳ ಹೈಕೋರ್ಟ್ ಆದೇಶಿಸಿದೆ.
ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ ರಾಜಸ್ಥಾನ ರಾಯಲ್ಸ್ ತಂಡದ ಮಾಜಿ ಆಟಗಾರ ಶ್ರೀಶಾಂತ್ ಅವರ ಮೇಲೆ ಬಿಸಿಸಿಐ ಅಜೀವ ನಿಷೇಧ ಹೇರಿತ್ತು. ಇದನ್ನು ಪ್ರಶ್ನಿಸಿ ಶ್ರೀಶಾಂತ್ ಕಾನೂನು ಸಮರಕ್ಕೆ ಮುಂದಾಗಿದ್ದರು.
ದೆಹಲಿ ಪೊಲೀಸರು ನೀಡಿದ ಮಾಹಿತಿಯ ಆಧಾರದ ಮೇಲೆ ಬಿಸಿಸಿಐ ಅಜೀವ ನಿಷೇಧ ಹೇರಿರುವುದನ್ನು ಪ್ರಶ್ನಿಸಿ ಶ್ರೀಶಾಂತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಕ್ರಿಕೆಟ್ ನಿಂದ ದೂರವುಳಿಯುವಂತೆ ಆಜೀವ ನಿಷೇಧ ಹೇರಿ ಬಿಸಿಸಿಐ ಆದೇಶ ಹೊರಡಿಸಿರುವುದು ಸಂವಿಧಾನಾತ್ಮಕ ಹಕ್ಕುಗಳನ್ನು ಉಲ್ಲಂಘನೆ ಎಂದು ವಾದಿಸಿದ್ದರು.
ಕಳೆದ ಏಪ್ರಿಲ್ ನಲ್ಲಿ ಬಿಸಿಸಿಐ ಶ್ರೀಶಾಂತ್ ಮೇಲಿನ ಆಜೀವ ನಿಷೇಧವನ್ನು ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಸ್ಪಷ್ಟಪಡಿಸಿತ್ತು.
ಪ್ರಕರಣ ಸಂಬಂಧ ಸಾಕ್ಷ್ಯಾಧಾರದ ಕೊರತೆಯಿಂದಾಗಿ 2015ರಲ್ಲಿ ದೆಹಲಿ ನ್ಯಾಯಾಲಯ ಶ್ರೀಶಾಂತ್ ರನ್ನು ದೋಷಮುಕ್ತಗೊಳಿಸಿತ್ತು.