ಲಂಡನ್: ಲಂಡನ್ ನ ಕೆನಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ 2ನೇ ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಭಾರತ 240 ರನ್ ಗಳ ಭರ್ಜರಿ ಜಯ ದಾಖಲಿಸಿದೆ.
ಟಾಸ್ ಗೆದ್ದು ಭಾರತವನ್ನು ಬ್ಯಾಟಿಂಗ್ ಆಹ್ವಾನ ಮಾಡಿದ ಬಾಂಗ್ಲಾದೇಶ ನಾಯಕ ಶಕೀಬ್ ಅಲ್ ಹಸನ್ ಭಾರತವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವ ವಿಶ್ವಾಸ ಹೊಂದಿದ್ದರು. ಆದರೆ ಆರಂಭಿಕ ಆಘಾತದ ಹೊರತಾಗಿಯೂ ಚೇತರಿಸಿಕೊಂಡ ಭಾರತ ಶಿಖರ್ ಧವನ್ (60 ರನ್), ದಿನೇಶ್ ಕಾರ್ತಿಕ್ (94 ರನ್) ಹಾಗೂ ಹಾರ್ದಿಕ್ ಪಾಂಡ್ಯ ಅಜೇಯ 80 ರನ್ ಗಳ ನೆರವಿನಿಂದಾಗಿ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 324 ರನ್ ಗಳ ಬೃಹತ್ ಮೊತ್ತ ಪೇರಿಸಿತು.
ಈ ಮೊತ್ತವನ್ನು ಬೆನ್ನು ಹತ್ತಿದ ಬಾಂಗ್ಲಾದೇಶ ಆರಂಭದಿಂದಲೂ ನಿಗದಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ಪರಿಣಾಮ ತಂಡದ ಮೊತ್ತ 50 ರನ್ ಗಳಾಗುವಷ್ಟರಲ್ಲಿಯೇ ಬಾಂಗ್ಲಾದೇಶ ಪ್ರಮುಖ 7 ವಿಕೆಟ್ ಗಳನ್ನು ಕಳೆದುಕೊಂಡು ಸೋಲಿನ ಸುಳಿಯಲ್ಲಿ ಸಿಲುಕಿತ್ತು. ಈ ಹಂತದಲ್ಲಿ ಹೊಸನ್ ಮತ್ತು ಮಿರಾಜ್ ಭಾರತಕ್ಕೆ ಕೊಂಚ ಪ್ರತಿರೋಧ ಒಡ್ಡಿದರಾದರೂ ತಂಡವನ್ನು ಸೋಲಿನ ದವಡೆಯಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಬಾಂಗ್ಲಾದೇಶ ಕೇವಲ 23.5 ಓವರ್ ಗಳಲ್ಲಿ 84 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 240 ರನ್ ಗಳ ಅಂತರದಲ್ಲಿ ಭಾರತದ ಎದುರು ಸೊಲೊಪ್ಪಿಕೊಂಡಿತು.
ಭಾರತದ ಪರ ಭುವನೇಶ್ವರ ಕುಮಾರ್ ಹಾಗೂ ಉಮೇಶ್ ಯಾದವ್ ತಲಾ 3 ವಿಕೆಟ್ ಪಡೆದರೆ, ಶಮಿ, ಬುಮ್ರಾ, ಪಾಂಡ್ಯಾ ಮತ್ತು ಅಶ್ವಿನ್ ತಲಾ ಒಂದು ವಿಕೆಟ್ ಪಡೆದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos