ಕೊಲಂಬೋ: ಶ್ರೀಲಂಕಾದ ಕೊಲಂಬೋದಲ್ಲಿ ನಡೆಯುತ್ತಿರುವ ನಿಡಹಾಸ್ ತ್ರಿಕೋನ ಟಿ20 ಸರಣಿಯಲ್ಲಿ ಪ್ರವಾಸಿ ಭಾರತ ತಂಡ ಬಾಂಗ್ಲಾದೇಶಕ್ಕೆ ಗೆಲ್ಲಲು 177 ರನ್ ಗಳ ಸವಾಲಿನ ಗುರಿ ನೀಡಿದೆ.
ಟಾಸ್ ಗೆದ್ದ ಬಾಂಗ್ಲಾದೇಶ ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಾಯಕ ರೋಹಿತ್ ಶರ್ಮಾ ಅವರ ಅಜೇಯ ಆಟ ಹಾಗೂ ಸುರೇಶ್ ರೈನಾ ಅವರ ಸಮಯೋಚಿತ ಆಟದ ನೆರವಿನಿಂದ ಬಾಂಗ್ಲಾದೇಶಕ್ಕೆ 177ರನ್ ಗಳ ಗುರಿ ನೀಡಿದೆ. ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಜೋಡಿ ಭಾರತಕ್ಕೆ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್ ಗೆ ಈ ಜೋಡಿ 70 ರನ್ ಗಳ ಉತ್ತಮ ಜೊತೆಯಾಟ ನೀಡಿತು.
35 ರನ್ ಗಳಿಸಿದ್ದ ಧವನ್ ರುಬೆಲ್ ಬೌಲಿಂಗ್ ನಲ್ಲಿ ಕ್ಲೀನ್ ಬೋಲ್ಡ್ ಆದರು. ಆ ಮೂಲಕ ಮೊದಲ ವಿಕೆಟ್ ಜೊತೆಯಾಟಕ್ಕೆ ಬ್ರೇಕ್ ಬಿತ್ತು. ಬಳಿಕ ಶರ್ಮಾ ಜೊತೆಗೂಡಿದ ಸುರೇಶ್ ರೈನಾ ಬೌಂಡರಿ ಸಿಕ್ಸರ್ ಗಳ ಮೂಲಕ ಭಾರತದ ರನ್ ಗಳಿಕೆಗೆ ವೇಗ ನೀಡಿದರು. ಈ ಹಂತದಲ್ಲಿ ಅರ್ಧಶತಕ ಸಿಡಿಸಿದ್ದ ರೋಹಿತ್ ಶರ್ಮಾ ಉತ್ತಮ ಬ್ಯಾಟಿಂಗ್ ಪ್ರದರ್ಶನ ಮುಂದುವರೆಸಿದರು. ರೈನಾ ಕೂಡ 47 ರನ್ ಗಳಿಸಿ ಅರ್ಧಶತಕದ ಹೊಸ್ತಿಲ್ಲಲ್ಲಿ ಇದ್ದಾಗ ಮತ್ತದೇ ರುಬೆಲ್ ಬೌಲಿಂಗ್ ಸೌಮ್ಯ ಸರ್ಕಾರ್ ಗೆ ಕ್ಯಾಚ್ ನೀಡಿ ಹೊರ ನಡೆದರು. ಬಳಿಕ ಬಂದ ದಿನೇಶ್ ಕಾರ್ತಿಕ್ 2 ರನ್ ಗಳಿಸಿದರು.
ಅಂತಿಮವಾಗಿ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. 89 ರನ್ ಗಳಿಸಿದ್ದ ರೋಹಿತ್ ಶರ್ಮಾ ಅಜೇಯರಾಗಿ ಉಳಿದರು.