ರಾಜಕೋಟ್: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿ ಬೆಂಚ್ ಕಾಯ್ದು ಬಂದಿದ್ದ ಕನ್ನಡಿಗ ಕರುಣ್ ನಾಯರ್ ರನ್ನು ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಗೆ ಆಯ್ಕೆ ಮಾಡದಿರುವ ಬಗ್ಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ನನಗೇನು ಗೊತ್ತಿಲ್ಲ. ಇದರಲ್ಲಿ ನನ್ನದೇನು ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ತಂಡದ ಆಯ್ಕೆ ಪ್ರಕ್ರಿಯೆ ನನ್ನ ಜವಾಬ್ದಾರಿಯಲ್ಲ. ಈ ಬಗ್ಗೆ ನಿರ್ಧಾರ ಕೈಗೊಳ್ಳುವುದು ಆಯ್ಕೆ ಸಮತಿಗೆ ಬಿಟ್ಟ ವಿಚಾರವಾಗಿದೆ. ಇದರಲ್ಲಿ ತಮ್ಮದೇನೂ ಪಾತ್ರವಿಲ್ಲ ಎಂದು ಕೊಹ್ಲಿ ಸ್ಪಷ್ಟನೆ ನೀಡಿದ್ದಾರೆ.
ಬಿಸಿಸಿಐ ಆಯ್ಕೆ ಸಮಿತಿ ನಿರ್ಧಾರದಲ್ಲಿ ನಾಯಕನ ಪಾತ್ರ ಇರುವುದಿಲ್ಲ. ಈ ಬಗ್ಗೆ ಅಭಿಮಾನಿಗಳು ಹಾಗೂ ಜನರು ಅರ್ಥ ಮಾಡಿಕೊಳ್ಳಬೇಕು ಎನ್ನುವ ಮೂಲಕ ಆಯ್ಕೆ ಸಮಿತಿ ನಿರ್ಧಾರದಲ್ಲಿ ನಾಯಕನ ಪಾತ್ರ ಇರಲ್ಲ ಎಂಬುದಾಗಿ ಕೊಹ್ಲಿ ಸ್ಪಷ್ಟಪಡಿಸಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಕರುಣ್ ನಾಯರ್ ಆಯ್ಕೆಯಾಗಿದ್ದರು. ಒಂದು ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಿರಲಿಲ್ಲ. ಆದರೆ ಕೊನೆಯ ಪಂದ್ಯದಲ್ಲಿ ಹೈದರಾಬಾದ್ ನ ಆಟಗಾರ ಹನುಮ ವಿಹಾರಿಗೆ ಅವಕಾಶ ಕಲ್ಪಿಸಲಾಗಿತ್ತು. ಇದನ್ನು ಹಿರಿಯ ಆಟಗಾರರು ಮತ್ತು ಅಭಿಮಾನಿಗಳು ತೀವ್ರವಾಗಿ ವಿರೋಧಿಸಿದ್ದರು. ಈ ಹಿನ್ನೆಲೆಯಲ್ಲಿ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್ ಸ್ಪಷ್ಟನೆ ನೀಡಿದ್ದರು.