ಮುಂಬೈ: ಖ್ಯಾತ ಟಾಕ್ ಷೋವೊಂದರಲ್ಲಿ ಬಾಯಿಗೆ ಬಂದಂತೆ ಅಸಭ್ಯ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಟೀಂ ಇಂಡಿಯಾ ಆಟಗಾರರಾದ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಗೆ 2 ಎಕದಿನ ಪಂದ್ಯಗಳ ನಿಷೇಧ ಹೇರಬೇಕು ಎಂದು ಶಿಫಾರಸ್ಸು ಮಾಡಲಾಗಿದೆ.
ಹೌದು ಇತ್ತೀಚೆಗ ಮುಕ್ತಾಯವಾದ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಬಳಿಕ ಖ್ಯಾತ ನಿರ್ದೇಶಕ ಕರಣ್ ಜೋಹರ್ ಅವರ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹೆಂಗಸರ ಬಗ್ಗೆ ಅಸಭ್ಯವಾಗಿ ಪೋಲಿ ಮಾತುಗಳಾಡಿದ್ದ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಗೆ ಬಿಸಿಸಿಐ 2 ಏಕದಿನ ಪಂದ್ಯಗಳ ನಿಷೇಧ ಹೇರುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿಸಿಸಿಐ ನೀಡಿರುವ ಶೋಕಾಸ್ ನೋಟಿಸ್ ಗೆ ಹಾರ್ದಿಕ್ ಪಾಂಡ್ಯಾ ಪ್ರತಿಕ್ರಿಯೆ ನೀಡಿ ಬಹಿರಂಗ ಕ್ಷಮೆಯಾಚಿಸಿದ್ದರೂ, ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಆಡಳಿತ ಮಂಡಳಿ ಅಧ್ಯಕ್ಷ ವಿನೋದ್ ರಾಯ್ ಅವರು ಹಾರ್ದಿಕ್ ಪಾಂಡ್ಯಾ ಮತ್ತು ಕೆಎಲ್ ರಾಹುಲ್ ಗೆ 2 ಏಕದಿನ ಪಂದ್ಯಗಳ ನಿಷೇಧ ಹೇರುವಂತೆ ಶಿಫಾರಸ್ಸು ಮಾಡಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಮಾತನಾಡಿದ ಅವರು ಹಾರ್ದಿಕ್ ಪಾಂಡ್ಯ ಪ್ರತಿಕ್ರಿಯೆ ತಮಗೆ ಸಮಾಧಾನ ತಂದಿಲ್ಲ. ಓರ್ವ ವೃತ್ತಿಪರ ಕ್ರಿಕೆಟಿಗನಾಗಿ ಅವರ ಬಾಯಿಂದ ಇಂತಹ ಮಾತುಗಳನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ವಿನೋದ್ ರಾಯ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಆದರೆ ಈ ಪ್ರಕರಣವನ್ನು ಬಿಸಿಸಿಐ ಆಡಳಿತ ಮಂಡಳಿ ಸದಸ್ಯೆ ಡಯಾನಾ ಎಡುಲ್ಜಿ ಅವರು ಕಾನೂನು ಸಮಿತಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಬಿಸಿಸಿಐನ ಕಾನೂನು ಸಮಿತಿ ತೆಗೆದುಕೊಳ್ಳುವ ತೀರ್ಮಾನದ ಮೇಲೆ ಹಾರ್ದಿಕ್ ರಾಹುಲ್ ಭವಿಷ್ಯ ನಿರ್ಧಾರವಾಗಲಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos