ಬಿಸಿಸಿಐ 
ಕ್ರಿಕೆಟ್

IPL 2025: ಒಂದು ವಾರದ ಬಳಿಕ ಮತ್ತೆ ಐಪಿಎಲ್ ಆರಂಭ; BCCI ಹೇಳಿದ್ದೇನು?

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ತೀವ್ರಗೊಂಡ ನಂತರ ಗುರುವಾರ ರಾತ್ರಿ ಧರ್ಮಶಾಲಾದ HPCA ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವು ರದ್ದಾಯಿತು.

ನವದೆಹಲಿ: ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಐಪಿಎಲ್ 2025 ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ಒಂದು ವಾರದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ದೃಢಪಡಿಸಿದೆ. ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ಪಂದ್ಯಾವಳಿಯ ಹೊಸ ವೇಳಾಪಟ್ಟಿ ಮತ್ತು ಸ್ಥಳಗಳನ್ನು ಸೂಕ್ತ ಸಮಯದಲ್ಲಿ ಘೋಷಿಸಲಾಗುವುದು ಎಂದು ಮಂಡಳಿ ತಿಳಿಸಿದೆ.

'ಸಂಬಂಧಿತ ಅಧಿಕಾರಿಗಳು ಮತ್ತು ಪಾಲುದಾರರೊಂದಿಗೆ ಸಮಾಲೋಚಿಸಿ ಪರಿಸ್ಥಿತಿಯ ಸಮಗ್ರ ಮೌಲ್ಯಮಾಪನದ ನಂತರ, ಪಂದ್ಯಾವಳಿಯ ಹೊಸ ವೇಳಾಪಟ್ಟಿ ಮತ್ತು ಸ್ಥಳಗಳ ಕುರಿತು ಹೆಚ್ಚಿನ ಮಾಹಿತಿಯನ್ನು ಸೂಕ್ತ ಸಮಯದಲ್ಲಿ ಪ್ರಕಟಿಸಲಾಗುವುದು' ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ತೀವ್ರಗೊಂಡ ನಂತರ ಗುರುವಾರ ರಾತ್ರಿ ಧರ್ಮಶಾಲಾದ HPCA ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವು ಮೊದಲ ಇನಿಂಗ್ಸ್‌ನ ಕೇವಲ 10.1 ಓವರ್‌ಗಳು ಮುಗಿದ ನಂತರವೇ ರದ್ದಾಯಿತು. ದಾಳಿಯು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಶುಕ್ರವಾರ ಈ ನಿರ್ಧಾರ ತೆಗೆದುಕೊಂಡಿದೆ.

ಧರ್ಮಶಾಲಾ ಮತ್ತು ಇತರ ಉತ್ತರ ಭಾರತದ ನಗರಗಳಲ್ಲಿನ ವಿಮಾನ ನಿಲ್ದಾಣಗಳನ್ನು ಬಂದ್ ಮಾಡಿರುವುದರಿಂ, ಪಿಬಿಕೆಎಸ್ ಮತ್ತು ಡಿಸಿ ತಂಡಗಳ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ, ಪಂದ್ಯದ ಅಧಿಕಾರಿಗಳು, ವೀಕ್ಷಕ ವಿವರಣೆಗಾರರು, ಪ್ರಸಾರ ಸಿಬ್ಬಂದಿ ಸದಸ್ಯರು ಮತ್ತು ಇತರ ಪ್ರಮುಖ ಐಪಿಎಲ್ ಸಂಬಂಧಿತ ಸಿಬ್ಬಂದಿಯನ್ನು ಶುಕ್ರವಾರ ಬೆಳಿಗ್ಗೆ ಧರ್ಮಶಾಲಾದಿಂದ ಬಸ್ ಮೂಲಕ ಜಲಂಧರ್‌ಗೆ ಸ್ಥಳಾಂತರಿಸಲಾಯಿತು. ವಿಶೇಷ ರೈಲಿನ ಮೂಲಕ ಅವರನ್ನು ನವದೆಹಲಿಗೆ ಕರೆದೊಯ್ಯಲಾಗುತ್ತಿದೆ.

ಫ್ರಾಂಚೈಸಿಗಳು ತಮ್ಮ ಆಟಗಾರರ ಸುರಕ್ಷತೆ ಕುರಿತು ಕಳವಳ ವ್ಯಕ್ತಪಡಿಸಿದ ನಂತರ ಎಲ್ಲ ಪ್ರಮುಖ ಪಾಲುದಾರರೊಂದಿಗೆ ಸಮಾಲೋಚಿಸಿದ ನಂತರ, ಸೈಕಿಯಾ ಮತ್ತು ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಅವರನ್ನೊಳಗೊಂಡ ಐಪಿಎಲ್ ಆಡಳಿತ ಮಂಡಳಿಯು ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಬಿಸಿಸಿಐ ತಿಳಿಸಿದೆ.

'ನಮ್ಮ ಸಶಸ್ತ್ರ ಪಡೆಗಳ ಶಕ್ತಿ ಮತ್ತು ಸನ್ನದ್ಧತೆಯ ಬಗ್ಗೆ ಬಿಸಿಸಿಐ ಸಂಪೂರ್ಣ ನಂಬಿಕೆ ಇಟ್ಟಿದ್ದರೂ, ಎಲ್ಲರ ಹಿತಾಸಕ್ತಿ ದೃಷ್ಟಿಯಿಂದ ಕಾರ್ಯನಿರ್ವಹಿಸುವುದು ವಿವೇಕಯುತವೆಂದು ಮಂಡಳಿ ಪರಿಗಣಿಸಿದೆ. ಈ ನಿರ್ಣಾಯಕ ಹಂತದಲ್ಲಿ, ಬಿಸಿಸಿಐ ರಾಷ್ಟ್ರದೊಂದಿಗೆ ದೃಢವಾಗಿ ನಿಲ್ಲುತ್ತದೆ. ಭಾರತ ಸರ್ಕಾರ, ಸಶಸ್ತ್ರ ಪಡೆಗಳು ಮತ್ತು ನಮ್ಮ ದೇಶದ ಜನರೊಂದಿಗೆ ನಾವು ನಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸುತ್ತೇವೆ' ಎಂದು ತಿಳಿಸಿದೆ.

'ನಮ್ಮ ಸಶಸ್ತ್ರ ಪಡೆಗಳ ಶೌರ್ಯ, ಧೈರ್ಯ ಮತ್ತು ನಿಸ್ವಾರ್ಥ ಸೇವೆಗೆ ಮಂಡಳಿಯು ನಮಿಸುತ್ತದೆ. ಆಪರೇಷನ್ ಸಿಂಧೂರ ಅಡಿಯಲ್ಲಿ ಅವರ ವೀರೋಚಿತ ಪ್ರಯತ್ನಗಳು ರಾಷ್ಟ್ರವನ್ನು ರಕ್ಷಿಸುತ್ತಿವೆ ಮತ್ತು ಪ್ರೇರೇಪಿಸುತ್ತಿವೆ. ಇತ್ತೀಚಿನ ಭಯೋತ್ಪಾದಕ ದಾಳಿ ಮತ್ತು ಪಾಕಿಸ್ತಾನದ ಸಶಸ್ತ್ರ ಪಡೆಗಳ ಅನಗತ್ಯ ಆಕ್ರಮಣಕ್ಕೆ ಅವರು ತಕ್ಕ ಪ್ರತಿಕ್ರಿಯೆಯನ್ನು ನೀಡುತ್ತಾರೆ' ಎಂದಿದೆ.

'ಕ್ರಿಕೆಟ್ ರಾಷ್ಟ್ರೀಯ ಪ್ಯಾಷನ್ ಆಗಿ ಉಳಿದಿದ್ದರೂ, ರಾಷ್ಟ್ರ ಮತ್ತು ಅದರ ಸಾರ್ವಭೌಮತ್ವ, ಸಮಗ್ರತೆ ಮತ್ತು ನಮ್ಮ ದೇಶದ ಭದ್ರತೆಗಿಂತ ದೊಡ್ಡದು ಯಾವುದೂ ಇಲ್ಲ. ಭಾರತವನ್ನು ರಕ್ಷಿಸುವ ಎಲ್ಲ ಪ್ರಯತ್ನಗಳನ್ನು ಬೆಂಬಲಿಸಲು ಬಿಸಿಸಿಐ ಬದ್ಧವಾಗಿದೆ ಮತ್ತು ರಾಷ್ಟ್ರದ ಹಿತದೃಷ್ಟಿಯಿಂದ ತನ್ನ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ' ಎಂದು ಸೈಕಿಯಾ ವಿವರಿಸಿದರು.

ಐಪಿಎಲ್ 2025ರ ಆವೃತ್ತಿಯಲ್ಲಿ ಈವರೆಗೆ 58 ಪಂದ್ಯಗಳು ಮುಗಿದಿದ್ದು, ಲೀಗ್ ಹಂತದಲ್ಲಿ 12 ಪಂದ್ಯಗಳು ಸೇರಿದಂತೆ ಪ್ಲೇಆಫ್‌ಗಳು ಉಳಿದಿವೆ.

ಬಿಸಿಸಿಐ ಪಂದ್ಯಾವಳಿಯನ್ನು ಒಂದು ವಾರ ಸ್ಥಗಿತಗೊಳಿಸಿರುವ ಬಗ್ಗೆ ಎಲ್ಲ ಹತ್ತು ಫ್ರಾಂಚೈಸಿಗಳಿಗೆ ತಿಳಿಸಿದ್ದು, ಶುಕ್ರವಾರ ಸಂಜೆ ವಿದೇಶಾಂಗ ಸಚಿವಾಲಯದ ಸಲಹೆ ಬಂದ ನಂತರ ಎಲ್ಲ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಯ ಸುರಕ್ಷಿತ ನಿರ್ಗಮನವನ್ನು ಖಚಿತಪಡಿಸಿಕೊಳ್ಳಲು ಯೋಜನೆಗಳನ್ನು ರೂಪಿಸಲು ಪ್ರಾರಂಭಿಸುತ್ತದೆ ಎಂದು ಸೈಕಿಯಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT