ದುಬೈ: ಭಾರತ ವಿರುದ್ಧ ಭಾನುವಾರ ನಡೆದ ಪಂದ್ಯದ ಸಮಯದಲ್ಲಿ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್ ಅವರು ಐಸಿಸಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ, ಅವರನ್ನು ಏಷ್ಯಾ ಕಪ್ನಿಂದ ತಕ್ಷಣ ತೆಗೆದುಹಾಕಬೇಕೆಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಸೋಮವಾರ ಒತ್ತಾಯಿಸಿದೆ.
ಪಂದ್ಯದ ಕೊನೆಯಲ್ಲಿ ಪೈಕ್ರಾಫ್ಟ್ ಅಂಪೈರ್ ಆಗಿ ಕಾರ್ಯನಿರ್ವಹಿಸಿದರು. ಆದರೆ, ಪಂದ್ಯ ಮುಗಿದ ಬಳಿಕ ಭಾರತೀಯ ಆಟಗಾರರು ಎದುರಾಳಿ ತಂಡದ ಆಟಗಾರರೊಂದಿಗೆ ಕೈಕುಲುಕಲಿಲ್ಲ.
ಪಿಸಿಬಿ ಪೈಕ್ರಾಫ್ಟ್ ವಿರುದ್ಧ ಐಸಿಸಿಗೆ ಔಪಚಾರಿಕ ದೂರು ದಾಖಲಿಸಿದೆ.
'ಐಸಿಸಿ ನೀತಿ ಸಂಹಿತೆ ಮತ್ತು ಕ್ರಿಕೆಟ್ ಸ್ಫೂರ್ತಿಗೆ ಸಂಬಂಧಿಸಿದ ಎಂಸಿಸಿ ಕಾನೂನುಗಳನ್ನು ಮ್ಯಾಚ್ ರೆಫರಿ ಉಲ್ಲಂಘಿಸಿದ್ದಾರೆ ಎಂದು ಪಿಸಿಬಿ ಐಸಿಸಿಗೆ ದೂರು ನೀಡಿದೆ. ಏಷ್ಯಾ ಕಪ್ನಿಂದ ಮ್ಯಾಚ್ ರೆಫರಿಯನ್ನು ತಕ್ಷಣವೇ ತೆಗೆದುಹಾಕಬೇಕೆಂದು ಪಿಸಿಬಿ ಒತ್ತಾಯಿಸಿದೆ' ಎಂದು ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ 'ಎಕ್ಸ್' ನಲ್ಲಿ ತಿಳಿಸಿದ್ದಾರೆ.
ಪಾಕಿಸ್ತಾನ ಈ ಹಿಂದೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಜೊತೆ ಈ ವಿಷಯವನ್ನು ಪ್ರಸ್ತಾಪಿಸಿ, ಭಾರತೀಯ ಆಟಗಾರರ ನಡವಳಿಕೆಯನ್ನು 'ಕ್ರೀಡಾಯೋಗ್ಯವಲ್ಲ' ಎಂದು ಕರೆದಿತ್ತು.
'ಭಾರತೀಯ ಆಟಗಾರರು ಕೈಕುಲುಕದಿರುವ ವರ್ತನೆಯ ವಿರುದ್ಧ ತಂಡದ ವ್ಯವಸ್ಥಾಪಕ ನವೀದ್ ಚೀಮಾ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದರು. ಇದನ್ನು ಕ್ರೀಡಾಯೋಗ್ಯವಲ್ಲದ ಮತ್ತು ಆಟದ ವಿರುದ್ಧವೆಂದು ಪರಿಗಣಿಸಲಾಗಿದೆ. ಪ್ರತಿಭಟನೆಯಾಗಿ ನಾವು ನಮ್ಮ ತಂಡದ ನಾಯಕನನ್ನು ಪಂದ್ಯದ ನಂತರದ ಸಮಾರಂಭಕ್ಕೆ ಕಳುಹಿಸಲಿಲ್ಲ' ಎಂದು ಪಿಸಿಬಿ ಈ ಹಿಂದೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಮೇ ತಿಂಗಳಲ್ಲಿ ಭಾರತ ನಡೆಸಿದ 'ಆಪರೇಷನ್ ಸಿಂಧೂರ' ನಂತರ ಮೊದಲ ಬಾರಿಗೆ ಐತಿಹಾಸಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡ ಮುಖಾಮುಖಿಯಾಗಿವೆ.