ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಆಯ್ಕೆ ಸಮಿತಿಯು ಮಂಗಳವಾರ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20ಐ ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದ್ದು, ಈ ಬಾರಿ 15 ವರ್ಷದ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿಗೂ ತಂಡದಲ್ಲಿ ಅವಕಾಶ ನೀಡಲಾಗಿದೆ.
ಅಫ್ಘಾನ್ ವಿರುದ್ಧದ ಟಿ20 ಸರಣಿಯು ಸೆಪ್ಟೆಂಬರ್ 13 ರಂದು ದೆಹಲಿಯಲ್ಲಿ ಆರಂಭವಾಗಲಿದ್ದು, ಈ ಸರಣಿಯು 2026 ರ ಏಷ್ಯನ್ ಕ್ರೀಡಾಕೂಟಕ್ಕೂ ಮುನ್ನ ನಡೆಯಲಿದೆ.
ಇನ್ನು ಗಾಯದಿಂದಾಗಿ ವಿರಾಮ ಪಡೆದಿದ್ದ ಹಲವು ಪ್ರಮುಖ ಆಟಗಾರರು ಇದೀಗ ತಂಡಕ್ಕೆ ಮರಳಿದ್ದಾರೆ. ಜುಲೈ 16 ರಂದು ಇಂಗ್ಲೆಂಡ್ನಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಭಾರತ ಪರ ಕೊನೆಯ ಪಂದ್ಯ ಆಡಿದ್ದ ಜಸ್ಪ್ರೀತ್ ಬುಮ್ರಾ ಕಮ್ ಬ್ಯಾಕ್ ಮಾಡಿದ್ದಾರೆ.
ಜಸ್ಪ್ರೀತ್ ಬುಮ್ರಾ ಜೊತೆಗೆ ಜೊತೆಗೆ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್ ಮತ್ತು ಹರ್ಷಿತ್ ರಾಣಾ ಅವರು ಸಹ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಅವರ ಅಂತಿಮ ಲಭ್ಯತೆಯು ಫಿಟ್ನೆಸ್ ಕ್ಲಿಯರೆನ್ಸ್ಗೆ ಒಳಪಟ್ಟಿರುತ್ತದೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.
ಜಿಂಬಾಬ್ವೆ ವಿರುದ್ಧ ಉತ್ತಮ ಫಾರ್ಮ್ನಲ್ಲಿದ್ದ ಹದಿಹರೆಯದ ಸ್ಟಾರ್ ಆಟಗಾರ ವೈಭವ್ ಸೂರ್ಯವಂಶಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಭಾರತದ ಅಗ್ರ ಕ್ರಮಾಂಕದಲ್ಲಿ ವೈಭವ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ ಸೇರಿದಂತೆ ಅನುಭವಿ ಆಟಗಾರರು ಮತ್ತು ಯುವ ಪ್ರತಿಭೆಗಳ ಮಿಶ್ರಣವಿದೆ.
ಮಧ್ಯಮ ಕ್ರಮಾಂಕದಲ್ಲಿ ನಾಯಕ ಶ್ರೇಯಸ್ ಅಯ್ಯರ್, ಉಪನಾಯಕ ತಿಲಕ್ ವರ್ಮಾ ಮತ್ತು ಶಿವಂ ದುಬೆ ಅವರಂತಹ ಆಟಗಾರರು ಇದ್ದಾರೆ.
ಭಾರತ ತಂಡ
ಶ್ರೇಯಸ್ ಅಯ್ಯರ್(ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಸಂಜು ಸ್ಯಾಮ್ಸನ್(ಡಬ್ಲ್ಯುಕೆ), ಇಶಾನ್ ಕಿಶನ್ (ಡಬ್ಲ್ಯುಕೆ), ತಿಲಕ್ ವರ್ಮಾ (ಉಪ ನಾಯಕ), ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ*, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್*, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಜಸ್ಪ್ರಿತ್ ಬುಮ್ರಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ.