ಅಕ್ಟೋಬರ್ ತಿಂಗಳಿನಲ್ಲಿ ಭಾರತೀಯ ಕ್ರಿಕೆಟ್ ವಿಶಿಷ್ಟ ಸನ್ನಿವೇಶದಲ್ಲಿ ಪ್ರದರ್ಶನ ನೀಡಲಿದೆ. 2026ರ ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಟೂರ್ನಮೆಂಟ್ನಲ್ಲಿ, ಭಾರತವು ಸೆಪ್ಟೆಂಬರ್ 28ರಂದು ನೇರವಾಗಿ ಕ್ವಾರ್ಟರ್ ಫೈನಲ್ಗೆ ಪ್ರವೇಶಿಸಲಿದೆ. ಅಕ್ಟೋಬರ್ 1 ರಂದು ಸೆಮಿಫೈನಲ್ ಪಂದ್ಯಗಳು ನಡೆಯಲಿದ್ದು, ಪದಕ ಸುತ್ತಿನ ಪಂದ್ಯಗಳು ಅಕ್ಟೋಬರ್ 3 ರಂದು ಜಪಾನ್ನ ಐಚಿ-ನಗೋಯಾದಲ್ಲಿ ನಡೆಯಲಿವೆ. ಅದೇ ದಿನ, ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರನೇ ಏಕದಿನ ಪಂದ್ಯವು ನ್ಯೂ ಚಂಡೀಗಢದಲ್ಲಿ ನಡೆಯಲಿದೆ. ಭಾರತ ಫೈನಲ್ಗೆ ಅರ್ಹತೆ ಪಡೆದರೆ, ಎರಡು ಭಾರತ ತಂಡಗಳು ಒಂದೇ ದಿನ ಬೇರೆ ಬೇರೆ ದೇಶಗಳಲ್ಲಿ ಆಡಲಿವೆ. ಏಷ್ಯನ್ ಗೇಮ್ಸ್ನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಟಿ20 ಸ್ವರೂಪದಲ್ಲಿ ಆಡಲಾಗುತ್ತದೆ.
ಭಾರತೀಯ ಪುರುಷರ ತಂಡ ಸೆಪ್ಟೆಂಬರ್ 22ಕ್ಕೂ ಮೊದಲು ಜಪಾನ್ ತಲುಪುವ ನಿರೀಕ್ಷೆಯಿದೆ. ಆ ದಿನ, ಶ್ರೇಯಸ್ ಅಯ್ಯರ್ ನೇತೃತ್ವದ ಭಾರತ ತಂಡವು ಜಪಾನ್ ತಂಡವನ್ನು ಎದುರಿಸಲಿದೆ.
ಅಯ್ಯರ್, ಟಿ20ಐ ತಂಡದ ನಾಯಕರಾಗಿರುವುದರ ಜೊತೆಗೆ, ಏಕದಿನ ತಂಡದ ಉಪನಾಯಕರೂ ಆಗಿದ್ದಾರೆ. ಏಷ್ಯನ್ ಗೇಮ್ಸ್ನಲ್ಲಿ ಭಾರತ ತಂಡವನ್ನು ಮುನ್ನಡೆಸಬೇಕಾಗಿರುವುದರಿಂದ ಶ್ರೇಯಸ್ ಅಯ್ಯರ್ ಸೆಪ್ಟೆಂಬರ್ನಲ್ಲಿ ಪ್ರಾರಂಭವಾಗುವ ವೆಸ್ಟ್ ಇಂಡೀಸ್ ವಿರುದ್ಧದ ಭಾರತದ ಮುಂದಿನ ಏಕದಿನ ಸರಣಿಗೆ ಗೈರಾಗಲಿದ್ದಾರೆ.
ಶ್ರೇಯಸ್ ಅಯ್ಯರ್ ಅವರನ್ನು 2025ರ ಅಕ್ಟೋಬರ್ನಲ್ಲಿ ಏಕದಿನ ತಂಡದ ಉಪನಾಯಕನನ್ನಾಗಿ ನೇಮಿಸಲಾಯಿತು.
ಈಮಧ್ಯೆ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಮಿಥುನ್ ಮನ್ಹಾಸ್, ಏಷ್ಯನ್ ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಭಾರತ ತಂಡಕ್ಕೆ ಶುಭ ಹಾರೈಸಿದರು. ಕ್ರಿಕೆಟ್ ತಂಡ ಸೇರಿದಂತೆ ಕ್ರೀಡಾಪಟುಗಳು ತಮ್ಮ ಅತ್ಯುತ್ತಮ ಪ್ರದರ್ಶನ ನೀಡಿ ಚಿನ್ನದ ಪದಕಗಳನ್ನು ಗೆಲ್ಲುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
'ಕ್ರಿಕೆಟ್ ತಂಡಗಳಿಗೆ ಮಾತ್ರವಲ್ಲ, ಏಷ್ಯನ್ ಕ್ರೀಡಾಕೂಟಕ್ಕೆ ಹೋಗುತ್ತಿರುವ ನಮ್ಮ ಇಡೀ ತಂಡಕ್ಕೆ ನಾನು ಶುಭ ಹಾರೈಸುತ್ತೇನೆ. ಅವರು ತಮ್ಮ ಅತ್ಯುತ್ತಮ ಪ್ರದರ್ಶನ ನೀಡಲಿ ಎಂದು ನಾನು ಭಾವಿಸುತ್ತೇನೆ. ಇಡೀ ದೇಶ ಅವರ ಹಿಂದೆ ಇದೆ ಮತ್ತು ನಾವು ಕೂಡ. ನಾನು ಅವರಿಗೆ ಎಲ್ಲ ಯಶಸ್ಸನ್ನು ಬಯಸುತ್ತೇನೆ ಮತ್ತು ಅವರು ಚಿನ್ನದ ಪದಕಗಳನ್ನು ಗೆದ್ದು ರಾಷ್ಟ್ರಕ್ಕೆ ಕೀರ್ತಿ ತರಲಿ ಎಂದು ಆಶಿಸುತ್ತೇನೆ' ಎಂದು ಮನ್ಹಾಸ್ ಸುದ್ದಿಸಂಸ್ಥೆ ANIಗೆ ತಿಳಿಸಿದರು.
2026ರ ಏಷ್ಯನ್ ಕ್ರೀಡಾಕೂಟಕ್ಕೆ ಭಾರತದ ಪುರುಷರ ಕ್ರಿಕೆಟ್ ತಂಡ
ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಶಿವಂ ದುಬೆ, ತಿಲಕ್ ವರ್ಮಾ (ಉಪನಾಯಕ), ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ಅರ್ಶದೀಪ್ ಸಿಂಗ್, ವೈಭವ್ ಸೂರ್ಯವಂಶಿ.