ಬೆಂಗಳೂರು: ಬೆಂಗಳೂರಿನ ಬೆನ್ನಿಗಾನಹಳ್ಳಿ ಡಿ-ನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಲೋಕಾಯುಕ್ತ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸುವಂತೆ ಕೋರಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ನ್ಯಾ.ಆನಂದಭೈರಾರೆಡ್ಡಿ ಅವರಿದ್ದ ನ್ಯಾಯಪೀಠ ವಿಚಾರಣೆ ಪೂರ್ಣಗೊಳಿಸಿದೆ.
ಪ್ರಕರಣದ ವಿವರ: ಬೆಂಗಳೂರು ಪೂರ್ವ ತಾಲೂಕು ಕೆ.ಆರ್.ಪುರ ಹೋಬಳಿಯ ಬೆನ್ನಿಗಾನಹಳ್ಳಿಯಲ್ಲಿನ ಸರ್ವೆ ನಂ.50/2ರಲ್ಲಿನ 4 ಎಕರೆ 20 ಗುಂಟೆ ಜಮೀನನ್ನು ಡಿ.ಕೆ. ಶಿವಕುಮಾರ್ ನಗರಾಭಿವೃದ್ಧಿ ಸಚಿವರಾಗಿದ್ದಾಗ ಖರೀದಿಸಿದ್ದರು. ನಂತರ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಎಲ್ಲ ದಾಖಲೆಗಳನ್ನು ಕಂದಾಯ ಇಲಾಖೆಯ ಅಧಿಕಾರಿಗಳಿಂದ ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದರು.
ಬಳಿಕ ಯಡಿಯೂರಪ್ಪ ತಮ್ಮ ಅಧಿಕಾರಾವಧಿಯಲ್ಲಿ ಡಿ.ಕೆ.ಶಿವಕುಮಾರ್ ಅವರ ಮನವಿ ಮೇರೆಗೆ ಈ ಜಾಗವನ್ನು ಅಕ್ರಮವಾಗಿ ಡಿ-ನೋಟಿಫಿಕೇಷನ್ ಮಾಡಿಸಿದ್ದಾರೆ ಎಂದು ಆರೋಪಿಸಿ ಟಿ.ಜೆ. ಅಬ್ರಾಹಾಂ ಮತ್ತು ಕಬ್ಬಾಳೆಗೌಡ ಎಂಬುವರು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.