ಜಿಲ್ಲಾ ಸುದ್ದಿ

ಉಗ್ರಪ್ಪ ಸೇರಿ ಪರಿಷತ್‍ನ 4 ಸದಸ್ಯರಿಗೆ ನೋಟಿಸ್

ಬೆಂಗಳೂರು: ವಿಧಾನ ಪರಿಷತ್‍ಗೆ ನಾಮ ನಿರ್ದೇಶನಗೊಂಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಪರಿಷತ್‍ನ ನಾಲ್ವರು ಸದಸ್ಯರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಸಾಮಾಜಿಕ, ಕಲೆ, ಸಾಹಿತ್ಯದಂತಹ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರನ್ನು ಮಾತ್ರ ಪರಿಷತ್ ಸ್ಥಾನಕ್ಕೆ ನಾಮ ನಿರ್ದೇಶನ ಮಾಡಬೇಕು. ಆದರೆ ಈ ನಿಯಮ ಉಲ್ಲಂಘಿಸಿ ರಾಜಕಾರಣಿಗಳನ್ನು ನಾಮನಿರ್ದೇಶನ ಮಾಡಿದ್ದಾರೆಂದು ಆರೋಪಿಸಿ ಮಾಜಿ ಸಂಸದ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಪಿ. ಕೋದಂಡರಾಮಯ್ಯ ಹೈಕೋರ್ಟ್ನಲ್ಲಿ ಅರ್ಜಿ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾ.ಅಬ್ದುಲ್ ನಜೀರ್ ಅವರ ಪೀಠ, ಪರಿಷತ್ ಸದಸ್ಯರಾದ ವಿ.ಎಸ್.ಉಗ್ರಪ್ಪ, ಅಬ್ದುಲ್ ಜಬ್ಬಾರ್, ಐವಾನ್ ಡಿ ಸೋಜಾ ಮತ್ತು ಇಕ್ಬಾಲ್ ಅಹಮದ್ ಸರಡಗಿ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಸಂವಿಧಾನದ 171(5)ವಿಧಿ ಪ್ರಕಾರ, ಸಾಹಿತ್ಯ, ಕಲೆ, ವಿಜ್ಞಾನದಂತಹ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದವರನ್ನು ಪರಿಷತ್ ಸ್ಥಾನಕ್ಕೆ ನಾಮ ನಿರ್ದೇಶನ ಮಾಡಬೇಕು. ಆದರೆ ಪಕ್ಷದ ನಿಷ್ಠಾವಂತರನ್ನು ಮತ್ತು ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿ ಕೊಂಡವರನ್ನು ನಾಮ ನಿರ್ದೇಶನ ಮಾಡುವ ಮೂಲಕ ಸಂವಿಧಾನದ ನಿಯಮ ಉಲ್ಲಂಘನೆ ಮಾಡಲಾಗಿದೆ. ಆದ್ದರಿಂದ ಕೂಡಲೇ ಈ ನಾಲ್ವರು ಪರಿಷತ್ ಸ್ಥಾನದಲ್ಲಿ ಮುಂದು ವರಿಯದಂತೆ ನಿರ್ದೇಶಿಸಬೇಕೆಂದು ಅರ್ಜಿದಾರರು ಮನವಿ ಮಾಡಿದ್ದರು. ವಿಚಾರಣೆ ನಡೆಸಿದ ಏಕಸದಸ್ಯ ಪೀಠ, ನಾಲ್ವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

SCROLL FOR NEXT