ಜಿಲ್ಲಾ ಸುದ್ದಿ

ಕಾನೂನು ಸುವ್ಯವಸ್ಥೆಗೆ ಇನ್ನಷ್ಟು ಕ್ರಮ: ಕೆ.ಜೆ.ಜಾರ್ಜ್

ಬೆಂಗಳೂರು: ಬೆಂಗಳೂರು ನಗರದ ಕಾನೂನು ಸುವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸುವ ಉದ್ದೇಶದಿಂದ ವಿವಿಧ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಬೆಂಗಳೂರು ನಗರ ಮಟ್ಟದ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ತರುವಾಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮ ರೀತಿಯಲ್ಲಿದೆ. ಬುಧವಾರ ಮೂರು ಸರ ಅಪಹರಣ ಪ್ರಕರಣಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಬಿಗಿಯಾದ ಕ್ರಮಕೈ ಗೊಳ್ಳಲು ಸೂಚಿಸಲಾಗಿದೆ ಎಂದರು. ಸಿಸಿಟಿವಿ ವ್ಯವಸ್ಥೆಯನ್ನು ಮೇಲ್ದರ್ಜೆ ಗೇರಿಸಲು ರು.40 ಕೋಟಿ ವೆಚ್ಚದ ಯೋಜನೆ ರೂಪಿಸಲಾಗುತ್ತಿದೆ. ಯಾವ ಭಾಗದಲ್ಲಿ ಇಂಥ ಪ್ರಕರಣ ನಡೆಯುತ್ತದೆಯೋ ಆ ಭಾಗದ ಡಿಸಿಪಿಗಳೇ ಹೊಣೆಗಾರರಾಗುತ್ತಾರೆ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ, ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್, ಹರಿಶೇಖರನ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು. ವೃತ್ತಿಪರ ಕಳ್ಳರ ಮೇಲೆ ಗೂಂಡಾಕಯ್ದೆ: ವೃತ್ತಿ ಪರ ಕಳ್ಳರನ್ನು ನಿಯಂತ್ರಿಸುವ ಉದ್ದೇಶದಿಂದ ಅವರ ಮೇಲೆ ಗೂಂಡಾಕಾಯ್ದೆ ಪ್ರಯೋಗಿಸಲು ಸೂಚಿಸಲಾಗಿದೆ ಎಂದು ಗೃಹ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಧಿಕಾರಿಗಳ ಸಭೆಯಲ್ಲಿ ವೃತ್ತಿಪರ ಕಳ್ಳರನ್ನು ನಿಯಂತ್ರಿಸಲು ಕಠಿಣ ಕ್ರಮಕೈಗೊಳ್ಳಬೇಕೆಂಬ ಸಲಹೆ ಕೇಳಿಬಂತಲ್ಲದೇ, ಚರ್ಚೆಯೂ ನಡೆಯಿತು. ಜೊತೆಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಡಿಸಿಪಿಗಳಿಗೆ ಗೂಂಡಾಕಾಯ್ದೆ ಪ್ರಯೋಗಿಸಲು ಅಧಿಕಾರ ನೀಡಬೇಕೆಂಬ ಪ್ರಸ್ತಾಪವಾಯಿತು. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮಕೈ ಗೊಳ್ಳಲಿದೆ ಎಂದು ಗೃಹ ಸಚಿವರು ತಿಳಿಸಿದರು.

SCROLL FOR NEXT