ಜಿಲ್ಲಾ ಸುದ್ದಿ

ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ: ಟೆಕ್ಕಿ ಸಾವು

Manjula VN

ಬೆಂಗಳೂರು: ನಗರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಸೇರಿ ಇಬ್ಬರು ಮೃತಪಟ್ಟಿದ್ದಾರೆ.

ಶವಂತಪುರ ಮೇಲ್ಸೇತುವೆ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ಸಾಫ್ಟ್ ವೇರ್ ಎಂಜಿನಿಯರ್ ಮೃತಪಟ್ಟ ಘಟನೆ ಭಾನುವಾರ ನಸುಕಿನಲ್ಲಿ ಸಂಭವಿಸಿದೆ. ರಾಜಾಜಿನಗರ ನಿವಾಸಿ ಎಲ್.ವಿನಯ್ ಶಂಕರ್ (26) ಮೃತರು. ನಗರದ ಎಚ್‍ಪಿ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶಂಕರ್, ಶನಿವಾರ ರಾತ್ರಿ ಭೂಪಸಂದ್ರದಲ್ಲಿರುವ ಸ್ನೇಹಿತನ ಮನೆಯಲ್ಲಿ ಪಾರ್ಟಿ ಮಾಡಿ ಅಲ್ಲೇ ಉಳಿದುಕೊಂಡಿದ್ದರು.

ಬೆಳಗ್ಗೆ 6 ಗಂಟೆ ಸುಮಾರಿಗೆ ತಮ್ಮ ಬೈಕ್‍ನಲ್ಲಿ ಮನೆಗೆ ವಾಪಸಾಗುತ್ತಿದ್ದರು. ಯಶವಂತಪುರ ಮೇಲ್ಸೇತುವೆ ತಿರುವಿನಲ್ಲಿ ತೆರಳುವಾಗ ನಿಯಂತ್ರಣ ತಪ್ಪಿ ರಸ್ತೆ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದಿದೆ. ತಲೆಗೆ ತೀವ್ರ ಪೆಟ್ಟಾಗಿದ್ದ ಶಂಕರ್ ನನ್ನು ಇತರೆ ವಾಹನ ಸವಾರರು ಮಲ್ಲೇಶ್ವರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಮಾರ್ಗ ಮಧ್ಯೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಶಂಕರ್ ತಂದೆ ಕೈಮಗ್ಗ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಪಘಾತ ಸಂಭವಿಸಿದ ವೇಳೆ ಶಂಕರ್, ಮದ್ಯಪಾನ ಮಾಡಿದ್ದರೋ ಇಲ್ಲವೋ ಎನ್ನುವ ಬಗ್ಗೆ ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ತಿಳಿದು ಬರಲಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಯಶವಂತಪುರ ಸಂಚಾರ ಪೊಲೀಸರು ಹೇಳಿದ್ದಾರೆ.

SCROLL FOR NEXT