ಪಾಟ್ನಾ: ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕ ಹಾಗೂ ಪಂಜಾಬ್ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಸಿಧು ಕೋಮು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.
ಬಿಹಾರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದ ನವಜೋತ್ ಸಿಂಗ್ ಸಿಧು, 'ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಸ್ಲಿಮರು ಒಗ್ಗೂಡಬೇಕು ಎಂದು ಕರೆ ನೀಡಿದ್ದರು. ಕಾಂಗ್ರೆಸ್ ಅಭ್ಯರ್ಥಿ ತಾರಿಕ್ ಅನ್ವರ್ ಪರ ಪ್ರಚಾರ ರ್ಯಾಲಿಯಲ್ಲಿ ಮಾತನಾಡುವ ವೇಳೆ ಸಿಧು, "ಮುಸ್ಲಿಮರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಒಗ್ಗೂಡಬೇಕು" ಎಂದು ಕರೆ ನೀಡಿದ್ದರು. ಇದೇ ಕಾರಣಕ್ಕೆ ಸಿಧು ವಿರುದ್ಧ ಇದೀಗ ಕಟಿಯಾರ್ ಜಿಲ್ಲಾಡಳಿತ ಎಫ್ಐಆರ್ ದಾಖಲಿಸಿದೆ. ಚುನಾವಣಾ ಆಯೋಗದ ನಿರ್ದೇಶನದ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯದ ಮುಖ್ಯ ಚುನಾವಣಾ ಕಚೇರಿಯ ಮೂಲಗಳು ಹೇಳಿವೆ.
ಬಿಹಾರದ ಕಟಿಯಾರ್ ಜಿಲ್ಲೆಯ ಬರ್ಸೋಯಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಿಲ್ಲಾಧಿಕಾರಿಗಳ ನಿಷೇಧಾಜ್ಞೆ ಉಲ್ಲಂಘನೆಗಾಗಿ ಭಾರತೀಯ ದಂಡಸಂಹಿತೆಯ ಸೆಕ್ಷನ್ 188 ಮತ್ತು ಪ್ರಜಾಪ್ರತಿನಿಧಿ ಕಾಯ್ದೆ- 1951ರ ಸೆಕ್ಷನ್ 123(3) ಮತ್ತು 125ರ ಅನ್ವಯ ದೂರು ದಾಖಲಾಗಿದೆ. ಜಿಲ್ಲಾಡಳಿತದ ಫ್ಲೈಯಿಂಗ್ ಸ್ಕ್ವಾಡ್ ಮ್ಯಾಜಿಸ್ಟ್ರೇಟ್ ರಾಜೀವ್ ಕುಮಾರ್ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ ಎಂದು ಠಾಣಾಧಿಕಾರಿ ಚಂದ್ರಪ್ರಕಾಶ್ ಹೇಳಿದ್ದಾರೆ.
ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 123(3), ಯಾವುದೇ ಧರ್ಮ, ವರ್ಗ, ಸಮುದಾಯ, ಜಾತಿ ಮತ್ತು ಭಾಷೆ ಆಧಾರದಲ್ಲಿ ಮತಯಾಚನೆ ಮಾಡುವುದನ್ನು ನಿಷೇಧಿಸುತ್ತದೆ. ಸೆಕ್ಷನ್ 125 ಚುನಾವಣೆ ಸಂಬಂಧ ವರ್ಗಗಳ ನಡುವೆ ದ್ವೇಷ ಹರಡುವುದನ್ನು ನಿಷೇಧಿಸುತ್ತದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos