ನವದೆಹಲಿ: 95 ಲೋಕಸಭಾ ಕ್ಷೇತ್ರಗಳಿಗೆ ಜನಪ್ರತಿನಿಧಿಗಳನ್ನು ಆರಿಸಲು ಗುರುವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು ಗಣ್ಯರು, ರಾಜಕೀಯ ಮುಖಂಡರು ಮತ್ತು ಸೆಲೆಬ್ರಿಟಿಗಳು ಬೆಳ್ಳಂಬೆಳಗ್ಗೆಯೇ ತಮ್ಮ ಹಕ್ಕು ಚಲಾಯಿಸಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಪತ್ನಿ ಶಾಸಕಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ ಮಂಡ್ಯದ ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಜೊತೆಗೆ ರಾಮನಗರದ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.
ಇತ್ತ ಹಾಸನದಲ್ಲಿ ಸಚಿವ ಹೆಚ್ ಡಿ ರೇವಣ್ಣ ಮತ ಚಲಾಯಿಸುವ ಮುನ್ನ ಪತ್ನಿ ಭವಾನಿ ರೇವಣ್ಣ ಮತ್ತು ಪುತ್ರ ಹಾಸನದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಜೊತೆಗೆ ಬಂದು ಪಡುವಲಹಿಪ್ಪೆ ಗ್ರಾಮದ ದೇವಸ್ಥಾನದಲ್ಲಿ ಗೆಲುವಿಗಾಗಿ ಪ್ರಾರ್ಥನೆ ಮತ್ತು ವಿಶೇಷ ಪೂಜೆ ಸಲ್ಲಿಸಿದರು.
ಬೆಂಗಳೂರು ದಕ್ಷಿಣ ಕ್ಷೇತ್ರದ ಜಯನಗರ ಮತಗಟ್ಟೆ ಸಂಖ್ಯೆ 54ರಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಹಕ್ಕು ಚಲಾಯಿಸಿದರು. ತಮಿಳುನಾಡಿನಲ್ಲಿ ಸೂಪರ್ ಸ್ಟಾರ್ ಹಾಗೂ ರಾಜಕಾರಣಿ ರಜನಿಕಾಂತ್ ಚೆನ್ನೈಯ ಸ್ಟೆಲ್ಲಾ ಮ್ಯಾರಿಸ್ ಕಾಲೇಜಿನಲ್ಲಿ ತಮ್ಮ ಹಕ್ಕು ಚಲಾಯಿಸಿದರೆ, ಕಮಲ್ ಹಾಸನ್ ಚೆನ್ನೈಯ ಅಲ್ವರ್ ಪೇಟೆ ಕಾರ್ಪೊರೇಶನ್ ಶಾಲೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು. ಕಾಂಗ್ರೆಸ್ ನಾಯಕ ಮಾಜಿ ಸಚಿವ ಪಿ ಚಿದಂಬರಂ ಶಿವಗಂಗಾದಲ್ಲಿ ವೋಟಿಂಗ್ ಮಾಡಿದರು.