ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರ್ಯಾಲಿಗೆ ಅನುಮತಿ ನಿರಾಕರಿಸುವ ಮೂಲಕ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಜಾಪ್ರಭುತ್ವವನ್ನು ಸರ್ವಾಧಿಕಾರವಾಗಿ ಬದಲಾಯಿಸಿಕೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಇಂದು ಅಮಿತ್ ಶಾ ಅವರು ಪಶ್ಚಿಮ ಬಂಗಾಳದ ಜಾಧವ್ ಪುರದಲ್ಲಿ ರ್ಯಾಲಿಯಲ್ಲಿ ಭಾಗವಹಿಸಬೇಕಾಗಿತ್ತು, ಆದರೆ ಸರ್ಕಾರ ಕಳೆದ ರಾತ್ರಿ ಅನುಮತಿ ನಿರಾಕರಿಸಿ ಅಲ್ಲಿಗೆ ಅಮಿತ್ ಶಾ ಅವರ ಹೆಲಿಕಾಪ್ಟರ್ ಬಂದಿಳಿಯುವುದಕ್ಕೆ ನೀಡಿದ್ದ ಅನುಮತಿಯನ್ನು ನಿರಾಕರಿಸಿದೆ, ಇಲ್ಲಿ ಚುನಾವಣಾ ಆಯೋಗ ಮೂಕ ಪ್ರೇಕ್ಷಕನಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವದೇಕರ್ ಆರೋಪಿಸಿದರು.
ಅವರಿಂದು ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯದಲ್ಲಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದು ಕ್ರಮ ಕೈಗೊಳ್ಳಬೇಕೆಂದು ಚುನಾವಣಾ ಆಯೋಗವನ್ನು ಒತ್ತಾಯಿಸಿದರು.
ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಚುನಾವಣಾ ಆಯೋಗ ಈ ಬೆಳವಣಿಗೆಯ ಮಾಹಿತಿ ಪಡೆುದುಕೊಂಡು ಕ್ರಮ ಕೈಗೊಳ್ಳಬೇಕು. ಪ್ರಮುಖ ನಾಯಕರಿಗೆ ರ್ಯಾಲಿ ನಡೆಸಲು ಅವಕಾಶ ನೀಡದಿದ್ದರೆ ಚುನಾವಣೆಗೆ ಅರ್ಥವೇನಿದೆ ಎಂದು ಪ್ರಶ್ನಿಸಿದರು.