ಪಾಟ್ನಾ: ಕಾಂಗ್ರೆಸ್ ಗೆ ಪ್ರಧಾನಿ ಹುದ್ದೆ ಸಿಗದಿದ್ದರೆ ಯಾವುದೇ ಸಮಸ್ಯೆ ಇಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವುದೇ ಮುಖ್ಯ ಗುರಿ ಎಂದು ಹಿರಿಯ ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಅವರು ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ಪ್ರಧಾನಿ ಹುದ್ದೆ ತ್ಯಾಗಕ್ಕೆ ಸಿದ್ಧವಿದೆ ಎಂಬ ಸಂದೇಶ ರವಾನಿಸಿದ್ದಾರೆ.
ಗುಲಾಂ ನಬಿ ಆಜಾದ್ ಅವರ ಈ ಹೇಳಿಕೆ ರಾಷ್ಟ್ರರಾಜಕಾರಣದಲ್ಲಿ ಭಾರೀ ಮಹತ್ವ ಪಡೆದುಕೊಂಡಿದ್ದು, ಪ್ರಧಾನಿ ಹುದ್ದೆ ಮೇಲೆ ಕಣ್ಣಿಟ್ಟಿರುವ ಹಲವು ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್ ಜತೆ ಕೈಜೋಡಿಸುವ ಸಾಧ್ಯತೆ ಇದೆ.
ನಾವು ಈಗಾಗಲೇ ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದೇವೆ. ಪ್ರಧಾನಿ ನರೇಂದ್ರ ಮೊದಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವುದು ನಮ್ಮ ಪ್ರಮುಖ ಗುರಿ. ಅದಕ್ಕೆ ನಾವು ಬದ್ಧರಾಗಿದ್ದೇವೆ. ಪ್ರಧಾನಿ ಹುದ್ದೆಯೂ ನಮಗೆ ಬೇಕೆಂದಿಲ್ಲ. ಈ ಬಗ್ಗೆ ನಾವು ನಂತರ ನಿರ್ಧರಿಸುತ್ತೇವೆ ಎಂದು ಗುಲಾಂ ನಬಿ ಆಜಾದ್ ಅವರು ಹೇಳಿದ್ದಾರೆ.
ಗುಲಾಂ ಅವರ ಹೇಳಿಕೆಗೆ ಕಾಂಗ್ರೆಸ್ ಕಡೆಯಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ ಲೋಕಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಲ್ಲಿ ಕಾಂಗ್ರೆಸ್ ಎಲ್ಲ ತ್ಯಾಗಕ್ಕೂ ಸಿದ್ಧವಾಗಿದೆಯೆ ಎಂಬ ಪ್ರಶ್ನೆಯೂ ಎದ್ದಿದೆ.
ಕಾಂಗ್ರೆಸ್ ಈಗಾಗಲೇ ರಾಹುಲ್ ಗಾಂಧಿ ಅವರನ್ನೇ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿದೆ. ಆದರೆ ಫಲಿತಾಂಶ ಹತ್ತಿರವಾಗುತ್ತಿರುವಾಗ ಕಾಂಗ್ರೆಸ್ ನ ನಿಷ್ಠಾವಂತ ನಾಯಕರ ಬಾಯಲ್ಲಿ ಇಂಥ ಹೇಳಿಕೆ ಹೊರಬಂದಿದ್ದು, ಈಗ ಅಚ್ಚರಿ ಮೂಡಿಸಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos