ನವದೆಹಲಿ: ಮಹಾತ್ಮ ಗಾಂಧಿ ಪಾಕಿಸ್ತಾನದ ಪಿತಾಮಹ ಎಂದು ಫೇಸ್ ಬುಕ್ ನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದ ಬಿಜೆಪಿ ವಕ್ತಾರ ಅನಿಲ್ ಸೌಮಿತ್ರ ಅವರನ್ನು ಶುಕ್ರವಾರ ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಅನಿಲ್ ಸೌಮಿತ್ರ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದ್ದು, ಏಳು ದಿನಗಳಲ್ಲಿ ವಿವರಣೆ ನೀಡುವಂತೆ ಸೂಚಿಸಲಾಗಿದೆ.
ಭಾರತವು ಸನಾತನ ದೇಶವಾಗಿದೆ. ಭಾರತದಿಂದ ಪಾಕಿಸ್ತಾನ ನಿರ್ಮಾಣವಾಗಿದೆ. ಹೀಗಾಗಿ ಮಹಾತ್ಮ ಗಾಂಧಿ ಪಾಕಿಸ್ತಾನಕ್ಕೆ ಪಿತಾಮಹರೇ ಹೊರತು ಭಾರತಕ್ಕಲ್ಲ ಎಂದು ಪೋಸ್ಟ್ ಹಾಕಿದ್ದರು.
ತಮ್ಮ ಹೇಳಿಕೆಯ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅನಿಲ್ ಸೌಮಿತ್ರ ಅವರು, ಭಾರತದಿಂದ ಜವಾಹರಲಾಲ್ ನೆಹರು ಹಾಗೂ ಪಾಕಿಸ್ತಾನದಿಂದ ಮೊಹಮ್ಮದ್ ಅಲಿ ಜಿನ್ನಾ ಸೇರಿ ಎರಡು ರಾಷ್ಟ್ರಗಳನ್ನು ನಿರ್ಮಾಣ ಮಾಡಿದರು. ದೇಶ ವಿಭಜನೆ ಮಹಾತ್ಮ ಗಾಂಧಿ ಮುಂದೆಯೇ ಆಗಿದೆ. ಹೀಗಾಗಿ ಗಾಂಧೀಜಿ ಪಾಕಿಸ್ತಾನಕ್ಕೆ ಪಿತಾಮಹರು ಎಂದು ಹೇಳಿದ್ದರು.
ವಿವಾದಾತ್ಮಕ ಹೇಳಿಕೆ ನೀಡಿದ ಅನಿಲ್ ಸೌಮಿತ್ರ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದ್ದು, ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಪರವಾಗಿ ಹೇಳಿಕೆ ನೀಡುತ್ತಿರುವ ಉಳಿದ ನಾಯಕರಿಗೂ ಈ ಬಿಸಿ ತಟ್ಟುವ ಸಾಧ್ಯತೆಗಳಿವೆ ಎನ್ನಲಾಗಿದೆ.