ಔತಣ ಕೂಟದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ
ನವದೆಹಲಿ: ಹಾಲಿ ಲೋಕಸಭಾ ಚುನಾವಣೆ ಕುರಿತಂತೆ ಇತ್ತೀಚೆಗೆ ಪ್ರಕಟವಾದ ಎಲ್ಲ ಚುನಾವಣೋತ್ತರ ಸಮೀಕ್ಷೆಗಳು ಎನ್ ಡಿಎ ಪರವಾಗಿದ್ದು, ಇದೇ ಖುಷಿಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಎಲ್ಲ ಎನ್ ಡಿಯ ಮೈತ್ರಿಕೂಟದ ನಾಯಕರಿಗೆ ದೆಹಲಿಯಲ್ಲಿ ಭರ್ಜರಿ ಔತಣ ಕೂಟ ಏರ್ಪಡಿಸಿದ್ದಾರೆ.
ಎನ್ಡಿಎ ಮೈತ್ರಿಕೂಟದ ಎಲ್ಲ ಪಕ್ಷಗಳ ನಾಯಕರಿಗಾಗಿ ನವದೆಹಲಿಯ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ಆಯೋಜಿಸಿದ್ದ ಭೋಜನಕೂಟದಲ್ಲಿ ಪ್ರಧಾನಿ ನರೇಂದ್ರ ಮೋದಿ, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಸೇರಿದಂತೆ ಹಲವು ಖ್ಯಾತನಾಮ ಮುಖಂಡರು ಭಾಗಿಯಾಗಿದ್ದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಯಕರು ಸನ್ಮಾನ ಮಾಡಿದರು. ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆಯೇ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದ ಅಮಿತ್ ಶಾ ಅವರು ಬಳಿಕ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು.
ಮಂಗಳವಾರದ ಈ ಭೋಜನ ಕೂಟದಲ್ಲಿ ಎನ್ಡಿಎ ಮೈತ್ರಿಕೂಟದ 36 ಪಕ್ಷಗಳ ನಾಯಕರು ಪಾಲ್ಗೊಂಡಿದ್ದರು. ಬಳಿಕ ಮಾತನಾಡಿದ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ರಾಜನಾಥ್ ಸಿಂಗ್ ಅವರು, 'ಐದು ವರ್ಷಗಳ ಆಡಳಿತಾವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಲವು ಐತಿಹಾಸಿಕ ನಿರ್ಧಾರಗಳನ್ನು ಕೈಗೊಂಡರು ಎಂದು ಎನ್ಡಿಎ ಮೈತ್ರಿಕೂಟದ ಎಲ್ಲ ಪಕ್ಷಗಳ ನಾಯಕರು ಒಕ್ಕೂರಲಿನಿಂದ ಹೇಳಿದ್ದಾಗಿ ಮಾಧ್ಯಮಗಳಿಗೆ ತಿಳಿಸಿದರು. ಅಂತೆಯೇ ಇನ್ನೂ ಮೂರು ಮಿತ್ರಪಕ್ಷಗಳು ಭೋಜನ ಕೂಟದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದಿದ್ದರೂ ತಮ್ಮ ಬೆಂಬಲ ಪತ್ರ ನೀಡಿರುವುದಾಗಿ ರಾಜನಾಥ್ ಸಿಂಗ್ ಹೇಳಿದರು.
ಇನ್ನು ಈ ಸಭೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಕುರಿತು ಚರ್ಚಿಸಲಾಯಿತು. ಪ್ರತಿಪಕ್ಷಗಳ ನಾಯಕರು ಅವುಗಳನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸುತ್ತಿರುವುದು ಎನ್ಡಿಎ ಮೈತ್ರಿಕೂಟದ ಪಾಲಿಗೂ ಆತಂಕವನ್ನುಂಟು ಮಾಡಿದೆ. ಈ ವಿಷಯವಾಗಿಯೂ ಸಭೆ ವಿಸ್ತೃತವಾಗಿ ಚರ್ಚಿಸಿತು ಎನ್ನಲಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos