ಬೆಂಗಳೂರು: ಕಾಂಗ್ರೆಸ್ ಕೊನೆಗೂ ಧಾರಾವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಸೋಮವಾರ ಅಧಿಕೃತವಾಗಿ ಪ್ರಕಟಿಸಿದ್ದು, ಮಾಜಿ ಸಂಸದ ಐ.ಜಿ ಸನದಿ ಅವರ ಪುತ್ರ ಶಕೀರ್ ಸನದಿ ಅವರು ಬಿಜೆಪಿಯ ಪ್ರಹ್ಲಾದ್ ಜೋಷಿ ವಿರುದ್ಧ ಕಣಕ್ಕಿಳಿಯಲಿದ್ದಾರೆ.
ಬಿಜೆಪಿ ಭದ್ರಕೋಟೆಯಾಗಿರುವ ಧಾರವಾಡದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಟಿಕೆಟ್ ತಪ್ಪಿದ್ದು, ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಾಧಾನ ಭುಗಿಲೆದ್ದಿದೆ.
ಧಾರವಾಡ ಲೋಕಸಭಾ ವ್ಯಾಪ್ತಿಗೆ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳನ್ನು ಬರುತ್ತವೆ. ಈ ಪೈಕಿ ಧಾರವಾಡ ಜಿಲ್ಲೆಯ ಕುಂದಗೋಳ ಹಾಗೂ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಶಾಸಕರಿದ್ದು, ಇನ್ನುಳಿದ ಧಾರವಾಡದ ಐದು, ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇದ್ದಾರೆ. ಅಲ್ಲದೇ ಅಲ್ಪಸಂಖ್ಯಾತರು ಹೆಚ್ಚಾಗಿದ್ದು, ಸಹಜವಾಗಿಯೇ ಇಬ್ಬರು ನಡುವೇ ಪೈಪೋಟಿ ಏರ್ಪಟ್ಟಿದೆ.