ಬೆಂಗಳೂರು:2008ರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಪುನರ್ ರಚನೆಯಾದ ಆರಂಭದಲ್ಲಿ ಜೆಡಿಎಸ್ ತದನಂತರ ಕಾಂಗ್ರೆಸ್ ಪ್ರಾಬಲ್ಯ ಸಾಧಿಸುತ್ತಾ ಬಂದಿದ್ದು, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ. ಕೆ. ಸುರೇಶ್ ಗೆಲುವು ಸಾಧಿಸುವುದು ಬಹುತೇಕ ನಿಶ್ಚಿತವಾಗಿದೆ.
ಕಾಂಗ್ರೆಸ್ ಪ್ರಮುಖ ಹಿರಿಯ ನಾಯಕ ಡಿ. ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಬೆಂಬಲ ಇರುವುದರಿಂದ ಒತ್ತಡ ಕಡಿಮೆಯಾಗಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿ ಡಿ. ಕೆ. ಸುರೇಶ್ ಅವರನ್ನು ಬೆಂಬಲಿಸುತ್ತಿದ್ದಾರೆ. ಇದರಿಂದಾಗಿ ಅನಾಯಸವಾಗಿ ಗೆಲ್ಲಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ
2009ರಲ್ಲಿ ಜೆಡಿಎಸ್ ಪಕ್ಷದಿಂದ ಎಚ್ ಡಿ ಕುಮಾರಸ್ವಾಮಿ ಈ ಕ್ಷೇತ್ರದಲ್ಲಿ ಗೆಲುವು ಕಂಡಿದ್ದರು. ನಂತರ 2013ರಲ್ಲಿ ನಡೆದ ಉಪ ಚುನಾವಣೆ ಹಾಗೂ 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಡಿಕೆ ಸುರೇಶ್ ಗೆಲುವು ಸಾಧಿಸುತ್ತಾ ಬಂದಿದ್ದಾರೆ. ಬಿಜೆಪಿ ಅಭ್ಯರ್ಥಿ ಅಶ್ವತ್ ನಾರಾಯಣ್ ಎಷ್ಟೋ ಜನರಿಗೆ ಗೊತ್ತೇ ಇಲ್ಲ. ಇದು ಕೂಡಾ ಡಿಕೆ ಸುರೇಶ್ ಅವರಿಗೆ ವರವಾಗಿ ಪರಿಣಮಿಸಿದೆ.
ಬೆಂಗಳೂರಿನ ರಾಜರಾಜೇಶ್ವರಿ ನಗರ ಹಾಗೂ ಅನೇಕಲ್ ವಿಧಾನಸಭಾ ಕ್ಷೇತ್ರಗಳು ಈ ಕ್ಷೇತ್ರ ವ್ಯಾಪ್ತಿಗೆ ಸೇರಿವೆ. ಹೆಚ್ಚಿನ ಸಂಖ್ಯೆಯಲ್ಲಿ ಸಾಪ್ಟ್ ವೇರ್ ಎಂಜಿನಿಯರ್ ಗಳು ಇಲ್ಲಿ ವಾಸಿಸುತ್ತಿದ್ದಾರೆ. ಆದರೆ, ಎಷ್ಟು ಜನ ಟೆಕ್ಕಿಗಳು ಮತದಾನ ಮಾಡುತ್ತಾರೆ ಎಂಬುದು ಗೊತ್ತಿಲ್ಲ. ಈ ಏರಿಯಾದ ಸಂಸದರನ್ನೇ ನೋಡಿಯೇ ಇರಲಿಲ್ಲ ಎಂದು ಕೆಲವರು ಪ್ರಶ್ನಿಸುತ್ತಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವುದಾಗಿ ರಾಮನಗರದ ರೇಷ್ಮೆ ರೀಲಿಂಗ್ ಘಟಕದ ಕಾರ್ಮಿಕ ಪ್ರಶಾಂತ್ ಹೇಳುತ್ತಾರೆ.
ಕ್ಷೇತ್ರದಲ್ಲಿ ಒಕ್ಕಲಿಗ ಜನಾಂಗದ ಪ್ರಾಬಲ್ಯವಿದ್ದು, ಬಿಜೆಪಿಗೆ ಹಿನ್ನಡೆಯಾಗಲಿದೆ ಎಂದು ರಾಜಕೀಯ ತಜ್ಞ ರತ್ನಕರ್ ಜೋಷಿ ಹೇಳುತ್ತಾರೆ. ಕ್ಷೇತ್ರ ವ್ಯಾಪ್ತಿಗೆ ಬರುವ ಕನಕಪುರ, ಅನೇಕಲ್, ಮಾಗಡಿ, ಚನ್ನಪಟ್ಟಣ ಹಾಗೂ ರಾಮನಗರದಲ್ಲಿ ಹೆಚ್ಚಿನ ಸಂಖ್ಯೆಯ ಒಕ್ಕಲಿಗ ಜನಾಂಗ ಇರುವುದು ಡಿಕೆ ಸಹೋದರರಿಗೆ ಅನುಕೂಲವಾಗಲಿದೆ.
ಆದಾಗ್ಯೂ, ಮೋದಿ ಅವರ ಜನಪ್ರಿಯತೆ ಹಾಗೂ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧದ ಆಡಳಿತಾ ವಿರೋಧಿ ಅಲೆ ಗೆಲಲ್ಲು ನೆರವಾಗಲಿದೆ ಎಂದು ಬಿಜೆಪಿ ಅಭ್ಯರ್ಥಿ ಅಶ್ವತ್ ನಾರಾಯಣ್ ಭರವಸೆ ವ್ಯಕ್ತಪಡಿಸಿದ್ದಾರೆ.
ಹಾಲಿ ಸಂಸದರು ಏನನ್ನೂ ಮಾಡಿಲ್ಲ. ಕ್ಷೇತ್ರದಾದ್ಯಂತ ಪ್ರಚಾರಕ್ಕೆ ಉತ್ತಮ ಪ್ರತಿಕ್ರಿಯೆ ಕಂಡಬರುತ್ತಿದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಹಾಲಿ ಸಂಸದರು ವಿಫಲವಾಗಿದ್ದಾರೆ. ಶ್ರೀರಂಗ ಕುಡಿಯುವ ನೀರು ಯೋಜನೆ, ಮಂಜನಬೆಲೆ , ಮೇಕೆದಾಟು ಯೋಜನೆಗಳು ಅನುಷ್ಠಾನಗೊಂಡಿಲ್ಲ , ಇವೆಲ್ಲಾ ಅಂಶಗಳನ್ನು ತಮ್ಮ ಗೆಲುವಿಗೆ ಪೂರಕವಾಗಲಿವೆ ಎನ್ನುತ್ತಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos