ಬೆಂಗಳೂರು: 2019ರ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇನ್ನೂ ಕೆಲವೇ ಗಂಟೆಗಳು ಬಾಕಿ ಉಳಿದಿವೆ, ಮೊದಲ ಹಂತದಲ್ಲಿ 14 ಲೋಕಸಭೆ ಕ್ಷೇತ್ರಗಳಿಗೆ ಏಪ್ರಿಲ್ 18 ರಂದು ಮತದಾನ ನಡೆಯಲಿದೆ. ಹೀಗಾಗಿ ಕಾಂಗ್ರೆಸ್,ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಅಂತಿಮ ಹಂತದ ಪ್ರಚಾರಕ್ಕಾಗಿ ರಣತಂತ್ರ ಹೆಣೆಯುತ್ತಿದ್ದಾರೆ.
ಹಿರಿಯ ಒಕ್ಕಲಿಗ ನಾಯಕ ಆರ್.ಅಶೋಕ್, ರಾಜ್ಯದಲ್ಲಿ ನಡೆಯುವ ರ್ಯಾಲಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆ ತರಲು ಸಕಲ ಪ್ರಯತ್ನ ಮಾಡುತ್ತಿದ್ದಾರೆ. ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ವಿರುದ್ಧ ಎ.ಮಂಜು ಸ್ಪರ್ಧಿಸಿದ್ದಾರೆ ಹೀಗಾಗಿ ಹಾಸನಕ್ಕೆ ಮೋದಿ ಅವರನ್ನು ಕರೆತಂದು ಪ್ರಚಾರ ಮಾಡಿಸುವುದರಿಂದ ಬಿಜೆಪಿಗೆ ಅನುಕೂಲವಾಗಲಿದೆ ಎಂಬುದು ಆಶೋಕ್ ಅಭಿಪ್ರಾಯ.
ಇನ್ನೂ ಕಾಂಗ್ರೆಸ್ ನಲ್ಲಿ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿದೆ.ಬಹಿರಂಗ ಪ್ರಚಾರಕ್ಕೆ ಇನ್ನೂ 48 ಗಂಟೆಗಳು ಬಾಕಿ ಉಳಿದಿದ್ದು, ಈ ಸಮಯದಲ್ಲಿ ಕೇಂದ್ರದ ನಾಯಕರಿಗೆ ನಾವು ತೊಂದರೆ ಕೊಡಲು ಬಯಸುವುದಿಲ್ಲ, ನಮ್ಮ ಅಭ್ಯರ್ಥಿಗಳು ಎಲ್ಲಾ ಕ್ಷೇತ್ರದಲ್ಲೂ ಗೆಲುವು ಸಾಧಿಸುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ,
ಇನ್ನೂ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ತಮ್ಮ ಹೆಚ್ಚಿನ ಸಮಯವನ್ನು ಅಂದರೇ ಏಪ್ರಿಲ್ 18 ವರೆಗೂ ಮಂಡ್ಯದಲ್ಲಿರಲು ನಿರ್ಧರಿಸಿದ್ದಾರೆ, ಸ್ವತಂತ್ರ್ಯ ಅಭ್ಯರ್ಥಿ ಸುಮಲತಾ ಅಂಬರೀಷ್ ವಿರುದ್ದ ಕಣಕ್ಕಿಳಿದಿರುವ ತಮ್ಮ ಪುತ್ರನ ಪ್ರಚಾರದಲ್ಲಿ ಪಾಲ್ಗೋಳ್ಳಲಿದ್ದಾರೆ. ನಿಖಿಲ್ ಗೆಲುವಿಗಾಗಿ ಪಣ ತೊಟ್ಟಿರುವ ಕುಮಾರಸ್ವಾಮಿ ಎಲ್ಲಾ ರೀತಿಯ ರಣತಂತ್ರ ಹೆಣೆಯುತ್ತಿದ್ದಾರೆ.