ಕರ್ನಾಟಕ

ಲೋಕಾ ಸಮರ: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ, 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರ ಇಂದು ಅಂತ್ಯ

Srinivasamurthy VN
ಬೆಂಗಳೂರು: ಲೋಕಸಭೆ ಚುನಾವಣೆಯ ನಿಮಿತ್ತ ಕರ್ನಾಟಕದಲ್ಲಿ ಮೊದಲ ಹಂತದ ಮತದಾನಕ್ಕೆ ಇನ್ನು ಕೇವಲ ಎರಡು ದಿನ ಮಾತ್ರ ಬಾಕಿ ಇದ್ದು, ಇಂದು ರಾಜಕೀಯ ಪಕ್ಷಗಳ ಬಹಿರಂಗ ಪ್ರಚಾರ ಅಂತ್ಯವಾಗಲಿದೆ.
ಕರ್ನಾಟಕದ 14 ಕ್ಷೇತ್ರಗಳಲ್ಲಿ ಬಹಿರಂಗ ಚುನಾವಣಾ ಪ್ರಚಾರಕ್ಕೆ ಇಂದು ಕೊನೆಯ ದಿನವಾಗಿದ್ದು, ಸಂಜೆಯವರೆಗೆ ಪ್ರಚಾರಕ್ಕೆ ಅವಕಾಶವಿದ್ದು ನಂತರ ಮನೆಮನೆ ಪ್ರಚಾರ ಮಾತ್ರ ನಡೆಸಲು ಅನುಮತಿಯಿದೆ. ಕೊನೆಯ ದಿನ ಮತದಾರರನ್ನು ಓಲೈಸಲು ರಾಜಕೀಯ ಪಕ್ಷಗಳು ಸರ್ಕಸ್ ನಡೆಸುತ್ತಿದ್ದು, ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಈ ದಿನದ ಮೇಲೆ ಆಯೋಗ ಹದ್ದಿನಕಣ್ಣನ್ನು ಇಟ್ಟಿದೆ.
ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಇದೇ ಏಪ್ರಿಲ್ 18ರಂದು ಮತದಾನ ನಡೆಯಲಿದ್ದು, ಮತದಾನ ಮುಕ್ತಾಯಕ್ಕೆ 48 ತಾಸು ಮುನ್ನ ಅಂದರೆ ಇಂದು ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.
ಸ್ಥಳೀಯ ಮತದಾರರಲ್ಲದ ನಾಯಕರೂ ಇಂದು ಸಂಜೆಯೇ ಕ್ಷೇತ್ರಗಳನ್ನು ಬಿಟ್ಟು ಹೊರಡಬೇಕಾಗುತ್ತದೆ. ಈ ಕಾರಣಕ್ಕೆ ಬಹುತೇಕ ಅಭ್ಯರ್ಥಿಗಳು ರೋಡ್ ಶೋ ನಡೆಸಿ ಮತಯಾಚನೆ ನಡೆಸುತ್ತಾರೆ. ಬಹಿರಂಗ ಪ್ರಚಾರಕ್ಕೆ ತೆರೆಬಿದ್ದ ಬಳಿಕ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಬುಧವಾರ ಮನೆ ಮನೆ ಪ್ರಚಾರ ನಡೆಸಲಿದ್ದಾರೆ. 
SCROLL FOR NEXT