ಕರ್ನಾಟಕ

ಮೇ 23ರ ನಂತರ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ಪತನ: ಯಡಿಯೂರಪ್ಪ ಭವಿಷ್ಯ

Srinivas Rao BV
ಶಿವಮೊಗ್ಗ: ಲೋಕಸಭಾ ಚುನಾವಣೆ ಮತಗಳ ಎಣಿಕೆ ಕಾರ್ಯ ಮುಗಿದ ಮಾರನೇ ದಿನವೇ ರಾಜ್ಯ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳಲಿದೆ ಎಂದು ಪ್ರತಿ ಪಕ್ಷ ನಾಯಕರೂ ಆಗಿರುವ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಭವಿಷ್ಯ ನುಡಿದಿದ್ದಾರೆ. 
ತಮ್ಮ ಸ್ವಕ್ಷೇತ್ರ ಶಿಕಾರಿಪುರದಲ್ಲಿ  ಲೋಕಸಭಾ ಚುನಾವಣೆಗೆ ಮತದಾನ ನಡೆಸಿದ ನಂತರ ಸುದ್ಧಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಮೈತ್ರಿ ಸರ್ಕಾರ ವಿರುದ್ಧ 20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಅಸಮಧಾನಗೊಂಡಿದ್ದು, ಚುನಾವಣಾ ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆಯೇ ಇವರೆಲ್ಲ ಬಂಡಾಯ ಏಳಲಿದ್ದು, ಮೈತ್ರಿ ಸರ್ಕಾರ ಪತನಗೊಳ್ಳಲಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಸದಸ್ಯರ ನಿರಂತರ ತಮ್ಮ ಹಸ್ತಕ್ಷೇಪ,ಆಟಾಟೋಪಗಳಿಂದ  20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಆಕ್ರೋಶಗೊಂಡಿದ್ದು, ಮೇ 23ರ ಮತಗಳ ಎಣಿಕೆ ಕಾರ್ಯ ಮುಗಿದ ನಂತರ  “ಕೈ” ಶಾಸಕರೇ ಸರ್ಕಾರವನ್ನು ಮುಳುಗಿಸಲಿದ್ದಾರೆ ಎಂದು ಭವಿಷ್ಯ ನುಡಿದರು.
ರಾಜ್ಯದಲ್ಲಿ ಬಿಜೆಪಿ 22ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಯಡಿಯೂರಪ್ಪ, ಮತದಾರರನ್ನು ಸೆಳೆಯಲು ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರ  ವ್ಯಾಪಕ ಹಣ ಹಂಚಿದ್ದರೂ, ಇದರಿಂದ ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳಿದರು.
ಶಿವಮೊಗ್ಗ ಹಾಗೂ ಕಲಬುರಗಿಯಲ್ಲಿ ಬಿಜೆಪಿ ಅಭ್ಯರ್ಥಿಗಳು ಭಾರಿ ಮತಗಳ ಅಂತರದಲ್ಲಿ ಜಯಗಳಿಸಲಿದ್ದಾರೆ ಎಂದು ಭವಿಷ್ಯ ನುಡಿದರು.
SCROLL FOR NEXT