ಕರ್ನಾಟಕ

ಮಂಡ್ಯ: ಕಡಿಮೆ ಅಂತರದಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲುವು- ಸಾರಾ ಮಹೇಶ್

Nagaraja AB

ಮೈಸೂರು: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸುತ್ತಾರೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳುತ್ತಿದ್ದರೆ, ಗೆಲುವಿನ ಅಂತರ ಕಡಿಮೆ ಇರಲಿದೆ  ಎಂದು ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಹೇಳುತ್ತಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಹಲವರು ಹೇಳುತ್ತಿದ್ದಾರೆ. ಆದರೆ, ಅವರು ಕಡಿಮೆ ಅಂತರದಿಂದ ಗೆಲುವು ಸಾಧಿಸುತ್ತಾರೆ. ಕ್ಷೇತ್ರದಲ್ಲಿನ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಂದ ಈ ರೀತಿಯ ಪ್ರತಿಕ್ರಿಯೆ ಕಂಡುಬಂದಿದೆ ಎಂದು ಸಾರಾ ಮಹೇಶ್ ತಿಳಿಸಿದರು.

ನಿಖಿಲ್ ಕುಮಾರಸ್ವಾಮಿ ಸೋಲುತ್ತಾರೆ ಎಂಬ ಊಹಾಪೋಹಗಳನ್ನು ಅಲ್ಲಗಳೆದ ಸಾರಾ ಮಹೇಶ್  ಮೇ. 23 ರಂದು ಈ ಎಲ್ಲಾ ಊಹಾಪೋಹಗಳಿಗೆ ತೆರೆ ಬೀಳಲಿದೆ ಎಂದರು.

ಕುಮಾರಸ್ವಾಮಿ ಸರ್ಕಾರ ರೈತರ ಪರವಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿರುವುದು ನಿಖಿಲ್ ಗೆಲುವಿಗೆ ಸಹಕಾರಿಯಾಗಲಿದೆ. ಮಂಡ್ಯ ಜನರು ನಿಖಿಲ್ ಅವರ ಬಗ್ಗೆ ನಂಬಿಕೆ ಹೊಂದಿದ್ದು, ಮತ ಚಲಾಯಿಸಿರುವ ವಿಶ್ವಾಸವಿದೆ. ಮೈಸೂರು ಮತ್ತಿತರ ಕಡೆಗಳಲ್ಲಿನ ಮೈತ್ರಿ ಅಭ್ಯರ್ಥಿಗಳು ಕೂಡಾ ಗೆಲುವು ಸಾಧಿಸಲಿದ್ದಾರೆ ಎಂದು ಅವರು ಹೇಳಿದರು.

ಮೇ 30 ರ ನಂತರ ಮೈತ್ರಿ ಸರ್ಕಾರ ಪತನಗೊಳ್ಳಲಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆಯಿಂದ ಬಿಜೆಪಿ ಎರಡು ಮುಖಗಲು ಗೊತ್ತಾಗುತ್ತದೆ. 118 ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಒಗ್ಗಟ್ಟಿನಿಂದ ಇದ್ದು, ಮೇ 23 ರ ನಂತರವೂ ಈ ಸಂಖ್ಯೆಯಲ್ಲಿ ಕಡಿಮೆಯಾಗುವುದಿಲ್ಲ ಎಂದು ಸಾರಾ ಮಹೇಶ್  ಹೇಳಿದರು.

SCROLL FOR NEXT