ತುಮಕೂರು: ತುಮಕೂರು ಲೋಕಸಭೆ ಕ್ಷೇತ್ರದಿಂದ ಸೋಮವಾರ ನಾಮಪತ್ರ ಸಲ್ಲಿಸುವುದಾಗಿ ಸಂಸದ ಮುದ್ದ ಹನುಮೇಗೌಡ ಹೇಳುವ ಮೂಲಕ ಸಮ್ಮಿಶ್ರ ಸರ್ಕಾರದ ಮೈತ್ರಿ ಪಕ್ಷಗಳಿಗೆ ದೊಡ್ಡ ಶಾಕ್ ನೀಡಿದ್ದಾರೆ.
ತುಮಕೂರು ಜೆಡಿಎಸ್ ಪಾಲಾದ ಹಿನ್ನೆಲೆಯಲ್ಲಿ ಹೆಬ್ಬೂರು ಬಳಿಯ ತಮ್ಮ ತೋಟದ ನಿವಾಸದಲ್ಲಿ ಬೆಂಬಲಿಗರ ಸಭೆ ನಡೆಸಿದ ಮುದ್ದ ಹನುಮೇಗೌಡರು, ಸ್ಥಳೀಯ ಮುಖಂಡರ ನಿರ್ಣಯದಂತೆ ರಾಜಕೀಯ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಿದ್ದು, ಸೋಮವಾರ ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರಗಳನ್ನು ಹಂಚಿಕೆ ಮಾಡಿಕೊಂಡು ಮೈತ್ರಿ ಧರ್ಮಪಾಲನೆಗೆ ಮುಂದಾಗಿರುವ ಕಾಂಗ್ರೆಸ್-ಜೆಡಿಎಸ್ ಪಕ್ಷಗಳಿಗೆ ತುಮಕೂರು ಕ್ಷೇತ್ರ ಮುಳುವಾಗಿ ಪರಿಣಮಿಸಿದ್ದು, ಇದೀಗ ಕೈ ಪಾಳಯಕ್ಕೆ ಬಂಡಾಯದ ಬಿಸಿ ತಟ್ಟಿದೆ.
ತುಮಕೂರು ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡರು ಸ್ಪರ್ಧಿಸುವ ಸಾಧ್ಯತೆ ಇದೆ. ಹೀಗಾಗಿ ಟಿಕೆಟ್ ಕೈ ತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಕಾಂಗ್ರೆಸ್ ಪಕ್ಷದ ಹಾಲಿ ಸಂಸದ ಮುದ್ದುಹನುಮೇಗೌಡರು ಪಕ್ಷದ ವಿರುದ್ಧ ಬಂಡಾಯವೆದ್ದು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಸೋಮವಾರ ತಮ್ಮ ಬೆಂಬಲಿಗರು ಹಾಗೂ ಸ್ಥಳೀಯ ಮುಖಂಡರ ಜೊತೆಗೂಡಿ ಉಮೇದುವಾರಿಕೆ ಸಲ್ಲಿಸುವುದಾಗಿ ಹೇಳಿರುವ ಅವರು, ಟಿಕೆಟ್ ಗಾಗಿ ಅಂಗಲಾಚುವ ಪರಿಸ್ಥಿತಿ ಬರುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮಾಡಿಕೊಂಡಿರುವ ಒಪ್ಪಂದದಂತೆ ತುಮಕೂರು ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಬೇಕಾಗಿತ್ತು. ಜೆಡಿಎಸ್ ವರಿಷ್ಠ ನಾಯಕ, ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಅವರು ತುಮಕೂರಿನಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇಂದು ಹಠಾತ್ ರಾಜಕೀಯ ಬೆಳವಣಿಗೆಯಲ್ಲಿ ಮುದ್ದಹನುಮೇಗೌಡರು ಬೆಂಬಲಿಗರ ಸಭೆ ನಡೆಸಿ ಹೇಗಾದರೂ ಮಾಡಿ ಹಾಲಿ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ಆದರೆ, ಹೈ ಕಮಾಂಡ್ ನಿಂದ ಯಾವುದೇ ಅಭ್ಯರ್ಥಿಗಳ ಪಟ್ಟಿ ಇನ್ನೂ ಅಧಿಕೃತವಾಗಿ ಬಿಡುಗಡೆಯಾಗಿಲ್ಲ.
ಒಪ್ಪಂದದ ಪ್ರಕಾರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿರುವ ಬಗ್ಗೆ ಉಪ ಮುಖ್ಯಮಂತ್ರಿ ಪರಮೇಶ್ವರ ತೀವ್ರ ಅಸಮಾಧಾನಗೊಂಡು ಪ್ರಮುಖ ರಾಜಕೀಯ ಸಭೆಗಳಿಂದ ದೂರ ಉಳಿದಿದ್ದರು. ಅಷ್ಟೇ ಅಲ್ಲ ಜೆಡಿಎಸ್ ಮೈತ್ರಿ ಧರ್ಮ ಪಾಲನೆ ಮಾಡಬೇಕು. ಇದನ್ನು ಕಾಂಗ್ರೆಸ್ ಗೆ ಬಿಟ್ಟು ಕೊಡಬೇಕು ಎಂದು ಮನವಿ ಮಾಡಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos