ಬೆಂಗಳೂರು: ರಾಜ್ಯದಲ್ಲಿ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಆರೋಪಿಸಿರುವ ಕಾಂಗ್ರೆಸ್ ಈ ಸಂಬಂಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಜೆಡಿಎಸ್ ನಾಯಕರ ಮನೆ ಹಾಗೂ ಅವರ ಆಪ್ತರ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ನಡೆಸಿದ್ದ ದಾಳಿ ಕುರಿತು ಕೆಪಿಸಿಸಿ ಕೇಂದ್ರ ಚುನಾವಣಾ ಆಯೋಗ ಮತ್ತು ರಾಷ್ಟ್ರಪತಿ ಭವನಕ್ಕೆ ದೂರು ನೀಡಿದೆ. ಈ ಸಂಬಂಧ ರಾಜ್ಯದ ಮುಖ್ಯ ಚುನಾಣಾಧಿಕಾರಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ದೂರು ನೀಡಿದ್ದು,. ಇದರ ಪ್ರತಿಯನ್ನು ರಾಷ್ಟ್ರಪತಿ ಭವನಕ್ಕೂ ಕಳುಹಿಸಲಾಗಿದೆ.
ದೂರಿನಲ್ಲಿ 'ರಾಜ್ಯದಲ್ಲಿ ಏಪ್ರಿಲ್ 18 ಮತ್ತು 23ರಂದು ಎರಡು ಹಂತದಲ್ಲಿ ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಇಂಥಹ ಸಂದರ್ಭದಲ್ಲಿ ಕಾಂಗ್ರೆಸ್-ಜೆಡಿಎಸ್ ಪಕ್ಷಗಳನ್ನು ಗುರಿಯಾಗಿಸಿಕೊಂಡು ಮಾರ್ಚ್ 28ರಂದು ಐಟಿ ದಾಳಿ ನಡೆಸಲಾಗಿದೆ. ಜೆಡಿಎಸ್ ಸಚಿವರ ಸಂಬಂಧಿಗಳು ಹಾಗೂ ಕಾಂಗ್ರೆಸ್ ಬೆಂಬಲಿಗರ ನಿವಾಸದ ಮೇಲೆ ದಾಳಿಯಾಗಿದೆ. ರಾಮನಗರ, ಮಂಡ್ಯ, ಹಾಸನ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಈ ದಾಳಿಗಳಾಗಿವೆ. ಇದು ಸಂಪೂರ್ಣ ರಾಜಕೀಯ ಪ್ರೇರಿತವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ವಿಚಾರದಲ್ಲಿ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಹಾಗಾಗಿ ಐಟಿ ಇಲಾಖೆಗೆ ಸೂಕ್ತ ನಿರ್ದೇಶನ ನೀಡಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಅವಕಾಶ ಮಾಡಿಕೊಡಬೇಕು,' ಎಂದು ಒತ್ತಾಯಿಸಲಾಗಿದೆ.
'ನರೇಂದ್ರ ಮೋದಿ ಸರ್ಕಾರ ಮೊದಲಿನಿಂದಲೂ ಈ ರೀತಿ ಮಾಡುತ್ತಿದೆ. 2018ರಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲೂ ರಾಜಕೀಯ ವಿರೋಧಿಗಳ ವಿರುದ್ಧ ಇಂಥu ಅಸ್ತ್ರ ಪ್ರಯೋಗಿಸಿತ್ತು. ಶಿರಸಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ್ ನಿವಾಸದ ಮೇಲೆ ಐಟಿ ದಾಳಿ ಮಾಡಿಸಿತ್ತು. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆ ಬಳಿಕವೂ ಈ ಪ್ರವೃತ್ತಿ ಮುಂದುವರೆದಿದೆ. ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಲಾಗಿದೆ. ಈ ಮೂಲಕ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಯತ್ನಿಸುತ್ತಿದ್ದಾರೆ ಎಂದು ಗುಂಡೂರಾವ್ ತನ್ನ ದೂರಿನಲ್ಲಿ ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos