ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಚಿವ ರೋಷನ್ ಬೇಗ್, ಸಂದರ್ಭ ಬಂದರೆ ಮುಸಲ್ಮಾನರು ಎನ್ಡಿಎಗೆ ಬೆಂಬಲಿಸುವ ನಿಲುವನ್ನೂ ತೆಗೆದುಕೊಳ್ಳಬೇಕಾಗುತ್ತದೆ ಎಂಬ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾಗುವ ಬಗ್ಗೆ ಎಕ್ಸಿಟ್ ಪೋಲ್ಗಳಲ್ಲಿ ಬರುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ರೋಷನ್ ಬೇಗ್ ಕಿಡಿಕಾರಿದ್ದಾರೆ.
ಮತದಾನೋತ್ತರ ಸಮೀಕ್ಷೆಗಳಲ್ಲಿ ಎನ್ಡಿಎಗೆ ಸ್ಪಷ್ಟ ಬಹುಮತ ಬರುವ ಸುಳಿವು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿರುವ ಬೇಗ್, ಇಂಥ ಫಲಿತಾಂಶ ಬರುವುದನ್ನು ಮೊದಲೇ ನಿರೀಕ್ಷಿಸಲಾಗಿತ್ತು ಎಂದಿದ್ದಾರೆ.
''ರಾಜ್ಯದಲ್ಲಿ ಕಾಂಗ್ರೆಸ್ನ ವೈಫಲ್ಯಕ್ಕೆ ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ ಅವರೇ ಕಾರಣ. ರಾಜ್ಯದಲ್ಲಿ ಪಕ್ಷದ ಪ್ರಚಾರ ವೈಖರಿ ನೋಡಿದಾಗಲೇ ಇದೊಂದು ಪ್ಲಾಪ್ ಶೋ ಎನ್ನುವುದು ಗೊತ್ತಾಗಿತ್ತು. ಆದರೆ, ಪಕ್ಷದ ನಾಯಕರು ಭ್ರಮೆಯಲ್ಲಿದ್ದರು. ಈಗಲಾದರೂ ಅವರು ನೆಲದ ಮೇಲೆ ನಿಂತುಕೊಂಡು ವಾಸ್ತವವನ್ನು ಅರಿತುಕೊಳ್ಳಲಿ ಎಂದು ಲೇವಡಿ ಮಾಡಿದ್ದಾರೆ.
ಮುಸ್ಲಿಮರನ್ನು ಊಳಿಗದ ಆಳುಗಳಂತೆ ನೋಡಿಕೊಂಡರೆ ಪರ್ಯಾಯ ಮಾರ್ಗದ ಬಗ್ಗೆಯೂ ಯೋಚಿಸಬೇಕಾಗುತ್ತದೆ. ಕೇಂದ್ರದಲ್ಲಿ ಮತ್ತೆ ಎನ್ಡಿಎ ಸರಕಾರ ರಚನೆಯಾಗಲಿದೆ. ಈ ಸಂದರ್ಭದಲ್ಲಿ ಮುಸ್ಲಿಮರೂ ತಮ್ಮ ಭವಿಷ್ಯದ ಬಗ್ಗೆ ಯೋಚಿಸಬೇಕಾಗುತ್ತದೆ. ಅಗತ್ಯ ಕಂಡರೆ ಎನ್ಡಿಎಗೆ ಬೆಂಬಲಿಸುವ ಬಗ್ಗೆಯೂ ಪರಿಶೀಲಿಸಬೇಕಾಗುತ್ತದೆ ಎಂದು ಟಾಂಗ್ ನೀಡಿದ್ದಾರೆ