ನಿವೃತ್ತ ಲೋಕಾಯುಕ್ತ ನ್ಯಾಯಾಮೂರ್ತಿ ವೈ.ಭಾಸ್ಕರ್ ರಾವ್
ಬೆಂಗಳೂರು: ಲೋಕಾಯುಕ್ತದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಲೋಕಾಯುಕ್ತ ನ್ಯಾಯಾಮೂರ್ತಿ ವೈ.ಭಾಸ್ಕರ್ ರಾವ್ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ವಿಶೇಷ ತನಿಖಾ ತಂಡ(ಎಸ್ ಐಟಿ) ರಾಜ್ಯ ಸರ್ಕಾರದ ಅನುಮತಿ ಕೋರಿದೆ.
ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ವೈ ಭಾಸ್ಕರ್ ರಾವ್ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳು ದೊರಕಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿ ಎಂದು ಎಸ್ ಐಟಿ ಪತ್ರದಲ್ಲಿ ತಿಳಿಸಿದೆ.
ಈಗಾಗಲೇ ಎಸ್ ಐಟಿ ಈ ಕುರಿತು 500 ಪುಟಗಳ ವರದಿಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಸಲ್ಲಿಸಿದೆ. ಪುತ್ರ ಅಶ್ವಿನ್ ರಾವ್, ಅಮಾನತುಗೊಂಡಿರುವ ಪಿಆರ್ ಓ ಸಯ್ಯದ್ ರಿಜಾಯ್ ಮತ್ತು ಇತರೆ ಆರೋಪಿಗಳು ಸೇರಿಕೊಂಡು ಲೋಕಾಯುಕ್ತರ ಅಧಿಕೃತ ನಿವಾಸಕ್ಕೆ ಅಧಿಕಾರಿಗಳನ್ನು ಕರೆಸಿಕೊಂಡು ಹಣ ವಸೂಲಿ ಮಾಡುತ್ತಿರುವುದರ ಬಗ್ಗೆ ನ್ಯಾ.ಭಾಸ್ಕರ್ ರಾವ್ ಅವರಿಗೆ ಮಾಹಿತಿ ಇದ್ದರೂ, ತಡೆಯುವಲ್ಲಿ ವಿಫಲರಾಗಿದ್ದಾರೆ.
ಈ ಹಿನ್ನಲೆಯಲ್ಲಿ ಅಕ್ರಮದ ವಿರುದ್ಧ ಕ್ರಮಕೈಗೊಳ್ಳಲು ಮುಂದಾಗದೆ ಇರುವುದರಿಂದ ಭಾಸ್ಕರ್ ರಾವ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ಬೇಕಿದೆ ಎಂದು ಎಸ್ ಐಟಿ ಕೋರಿದೆ.