ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್(ಸಂಗ್ರಹ ಚಿತ್ರ)
ಬೆಂಗಳೂರು: ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ನಿಗಮ ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷರ ನೇಮಕಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ಗುಂಡೂರಾವ್ ಹೈಕಮಾಂಡ್ ಜೊತೆ ಚರ್ಚಿಸಿ ಅನುಮತಿ ಪಡೆಯಲು ಇಂದು ಸಂಜೆ ನವದೆಹಲಿಗೆ ತೆರಳಲಿದ್ದಾರೆ.
ಈ ಕುರಿತು ಸ್ವತಃ ಸಿದ್ದರಾಮಯ್ಯ ಇಂದು ಮೈಸೂರಿನ ನಂಜನಗೂಡಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಹೇಳಿದ್ದಾರೆ. ಈ ಮೂವರು ನಾಯಕರು ನಾಳೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ಉಪಾಧ್ಯಕ್ಷ ರಾಹುಲ್ಗಾಂಧಿ ಹಾಗೂ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಿ ನಿಗಮ ಮಂಡಳಿಗಳು ಹಾಗೂ ಮೇಲ್ಮನೆಯಲ್ಲಿ ಖಾಲಿ ಇರುವ ಮೂರು ಸ್ಥಾನಗಳ ನೇಮಕಾತಿಗೆ ಒಪ್ಪಿಗೆ ಪಡೆದು ಅಧಿಕೃತ ಪ್ರಕಟಣೆ ಹೊರಡಿಸಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
95ಕ್ಕೂ ಹೆಚ್ಚು ನಿಗಮಮಂಡಳಿಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರನ್ನು ನೇಮಕ ಮಾಡಲು ಈಗಾಗಲೇ ಪಟ್ಟಿಯನ್ನು ಸಿದ್ಧಗೊಳಿಸಲಾಗಿದೆ. ಕಳೆದ ಬಾರಿ ನಿಗಮ ಮಂಡಳಿ ನೇಮಕಾತಿ ಸಂಬಂಧ ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ಗಾಂಧಿಯವರು ಕೆಲವು ಮಾರ್ಗದರ್ಶನಗಳನ್ನು ರೂಪಿಸಿ ನೇಮಕಾತಿ ಮಾಡಿ ಎಂಬ ಸಲಹೆ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಸಾಮಾಜಿಕ ನ್ಯಾಯ, ಜಾತಿ ಸಮೀಕರಣ, ಪ್ರಾದೇಶಿಕತೆ, ಪಕ್ಷ ನಿಷ್ಠೆ, ಮುಂಬರುವ ವಿಧಾನಸಭೆ ಚುನಾವಣೆಗೆ ಆಗಬಹುದಾದ ಪ್ರಯೋಜನೆಗಳನ್ನು ಲೆಕ್ಕ ಹಾಕಿಕೊಂಡು ಪಟ್ಟಿಯನ್ನು ಸಿದ್ಧ ಮಾಡಿದ್ದು, ನಾಳೆ ಹೈಕಮಾಂಡ್ ಒಪ್ಪಿಗೆ ಪಡೆಯುವ ಸಾಧ್ಯತೆ ಇದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos