ಮಂಡ್ಯ: ತಮಿಳುನಾಡಿಗೆ ಮತ್ತೆ 30 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಕಾವೇರಿ ಮೇಲುಸ್ತುವಾರಿ ಸಮಿತಿ(ಸಿಎಂಸಿ) ಸೋಮವಾರ ಆದೇಶ ನೀಡುತ್ತಿದ್ದಂತೆ ಮಂಡ್ಯದಲ್ಲಿ ಮತ್ತೆ ಆಕ್ರೋಶ ಭುಗಿಲೆದ್ದಿದ್ದು, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಲಾಗುತ್ತಿದೆ.
ಸಿಎಂಸಿ ಆದೇಶ ಹೊರ ಬಿಳುತ್ತಿದ್ದಂತೆ ನಿಷೇಧಾಜ್ಞೆ ನಡುವೆಯೂ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಸತ್ಯಾಗ್ರಹ ಧರಣಿ ಸ್ಥಳದಲ್ಲಿ ಜಮಾವಣೆಗೊಂಡ ರೈತರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಕಾವೇರಿ ಉಸ್ತುವಾರಿ ಸಮಿತಿಯ ಆದೇಶವನ್ನು ಒಕ್ಕೊರಲಿನಿಂದ ಖಂಡಿಸಿದರು.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಧರಣಿ ಕುಳಿತು ವಾಹನಗಳನ್ನು ತಡೆದು, ಕಾವೇರಿ ನದಿ ನೀರಿನ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮತ್ತು ಕಾವೇರಿ ಮೇಲುಸ್ತುವಾರಿ ಸಮಿತಿಯು ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡುತ್ತಲೇ ಬಂದಿದ್ದು, ಸಮಿತಿಯು ಇಂದು ನೀಡಿರುವ ಆದೇಶ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ ಅವರು ಸೆ.20ರ ನಂತರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತಿಗೆ ಬದ್ಧರಾಗಿರಬೇಕೆಂದು ಆಗ್ರಹಿಸಿದರು.
ಕಾವೇರಿ ಮೇಲುಸ್ತುವಾರಿ ಸಮಿತಿಯ ಆದೇಶ ರಾಜ್ಯಕ್ಕೆ ಮಾರಕವಾಗಿದ್ದು, ಯಾವುದೇ ಕಾರಣಕ್ಕೂ ಕೆ.ಆರ್.ಎಸ್.ನಿಂದ ತಮಿಳುನಾಡಿಗೆ ನೀರನ್ನು ಬಿಡಬಾರದು ಎಂದ ಅವರು, ಸರ್ಕಾರ ನಡೆಸಲು ಸಿದ್ದರಾಮಯ್ಯಗೆ ಕಷ್ಟವಾದಲ್ಲಿ ಸಿಎಂ ಕುರ್ಚಿಯಿಂದ ಕೆಳಗಿಳಿಯಲಿ. ಅವರು ಅಧಿಕಾರ ಬಿಟ್ರೆ ಸಂತೋಷ, ಬಿಡದೇ ಇದ್ದರೆ ಘೇರಾವ್ ಮಾಡೋಣ, ಬಲವಂತ ಮಾಡೋಣ ಎಂದು ಆಕ್ರೋಶ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics