ಬೆಂಗಳೂರು: ಮೌಲ್ಯಮಾಪನ ಮುಗಿಸಿ ಬೇಸಿಗೆ ರಜೆ ಕಳೆಯಲು ಸಿದ್ಧರಾಗುತ್ತಿದ್ದ ಪಿಯುಸಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಶಾಕ್ ನೀಡಿದೆ.
ಕಲಾ ವಿಭಾಗದ ಉಪನ್ಯಾಸಕರನ್ನು ಹೊರತುಪಡಿಸಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕರು ಮೇ 5 ರಿಂದ 20ರವರೆಗೆ ಕಡ್ಡಾಯವಾಗಿ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕೆಂದು ಪದವಿಪೂರ್ವ ಶಿಕ್ಷಣ ಮಂಡಳಿ ಸೂಚನೆ ನೀಡಿದೆ.
ಈಗಾಗಲೇ ಪ್ರಸ್ತಾಪವನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಡಲಾಗಿದ್ದು, ಉಪನ್ಯಾಸಕರಿಗೆ ಕೌಶಲ್ಯ ವೃದ್ಧಿಸಿಕೊಳ್ಳುವುದು ಹಾಗೂ ಇಂದಿನ ಪರಿಸ್ಥಿತಿಗನುಗುಣವಾಗಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ತರಬೇತಿ ಶಿಬಿರಗಳನ್ನು ಆಯೋಜಿಸುತ್ತಿದ್ದೇವೆ. ಇದಕ್ಕೆ ಅನುಮತಿ ನೀಡಬೇಕೆಂದು ಮನವಿ ಮಾಡಲಾಗಿದೆ.
ಒಂದು ವೇಳೆ ಸರ್ಕಾರ ಅನುಮತಿ ನೀಡಿದರೆ ಮೇ 5 ರಿಂದ 20ರವರೆಗೆ ಜಿಲ್ಲಾಮಟ್ಟದಲ್ಲಿ ಉಪನ್ಯಾಸಕರಿಗೆ ಹಿರಿಯ ಪ್ರಾಂಶುಪಾಲರು, ಸಹಾಯಕ ಪ್ರಾಧ್ಯಾಪಕರು, ಪ್ರಾಧ್ಯಾಪಕರು, ಶಿಕ್ಷಣ ತಜ್ಞರಿಂದ ತರಬೇತಿ ಕಾರ್ಯಕ್ರಮಗಳು ನಡೆಯಲಿವೆ.
ಸಾಮಾನ್ಯವಾಗಿ ಪ್ರತಿವರ್ಷ ಮೇ 1 ರಿಂದ ಜೂನ್ 1ರವರೆಗೆ ಉಪನ್ಯಾಸಕರಿಗೆ ಬೇಸಿಗೆ ರಜೆ ಸಿಗುತ್ತಿತ್ತು. ಇದಕ್ಕೆ ಕಡಿವಾಣ ಹಾಕಿರುವ ಶಿಕ್ಷಣ ಇಲಾಖೆ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕರಿಗೆ ತರಬೇತಿ ನೀಡಲು ಮುಂದಾಗಿದೆ.
ಈಗಾಗಲೇ ತರಬೇತಿ ನೀಡುವ ಸಂಬಂಧ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ರಾಜ್ಯದಲ್ಲಿ 4524 ಸರ್ಕಾರಿ ಹಾಗೂ 1703 ಖಾಸಗಿ ಅನುದಾನಿತ ವಿಜ್ಞಾನ ಉಪನ್ಯಾಸಕರಿದ್ದರೆ, ವಾಣಿಜ್ಯ ವಿಭಾಗದಿಂದ ಸರಿಸುಮಾರು 8 ಸಾವಿರ ಉಪನ್ಯಾಸಕರು ಬೋಧನೆ ಮಾಡುತ್ತಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos