ಬೆಂಗಳೂರು: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾರ್ಚ್ 9ರಂದು ಆರಂಭವಾಗಲಿದ್ದು, ಪದವಿಪೂರ್ವ ಶಿಕ್ಷಣ ಇಲಾಖೆ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದೆ.
ಈ ವರ್ಷ 6.58 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಅವರಲ್ಲಿ 1.5 ಲಕ್ಷ ವಿದ್ಯಾರ್ಥಿಗಳು ಮರು ಪರೀಕ್ಷೆ ತೆಗೆದುಕೊಳ್ಳುವವರಾಗಿದ್ದಾರೆ ಮತ್ತು 30,000 ಮಂದಿ ಖಾಸಗಿ ಅಭ್ಯರ್ಥಿಗಳಾಗಿದ್ದಾರೆ.
ಕಳೆದ ವರ್ಷ ಅನೇಕ ಅಕ್ರಮ ನಡೆದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅವರದೇ ಕಾಲೇಜಿನಲ್ಲಿ ಈ ವರ್ಷ ಪರೀಕ್ಷೆ ಬರೆಯಲು ಬಿಡುತ್ತಿಲ್ಲ.
ಅಭ್ಯರ್ಥಿಗಳನ್ನು ಪರೀಕ್ಷೆಗೆ ಬರೆಯಲು ಕೂರಿಸುವಾಗ ಅನೇಕ ಬದಲಾವಣೆಗಳನ್ನು ಈ ವರ್ಷ ಮಾಡಲಾಗುತ್ತದೆ. ಯಾವುದೇ ಕಾಲೇಜುಗಳು ಪರೀಕ್ಷಾ ಕೇಂದ್ರಗಳೆಂದು ಘೋಷಣೆ ಮಾಡಿದರೆ ಆ ಕಾಲೇಜಿನ ವಿದ್ಯಾರ್ಥಿಗಳನ್ನು ಅಲ್ಲಿ ಪರೀಕ್ಷೆ ಬರೆಯಲು ಬಿಡುವುದಿಲ್ಲ. ಹತ್ತಿರದ ಕೇಂದ್ರಗಳಲ್ಲಿ ಅವಕಾಶ ನೀಡಲಾಗುತ್ತದೆ. ಅಕ್ರಮ ತಡೆಯಲು ಇದು ಇಲಾಖ ತೆಗೆದುಕೊಂಡಿರುವ ಕ್ರಮ ಎನ್ನುತ್ತಾರೆ ಹಿರಿಯ ಅಧಿಕಾರಿಗಳು.
ಈ ಮಧ್ಯೆ, ಈ ವರ್ಷ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಇಲಾಖೆಯಿಂದ ಸಿಕ್ಕಿರುವ ಮಾಹಿತಿ ಪ್ರಕಾರ, 235 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿಲ್ಲ, ಅಲ್ಲಿ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲು ಎರಡು ವಾರ ಕಾಲಾವಕಾಶ ನೀಡಲಾಗುವುದು. ಒಂದು ವೇಳೆ ನಿಯಮ ಪಾಲಿಸದಿದ್ದರೆ ಅಂತಹ ಕೇಂದ್ರಗಳನ್ನು ರದ್ದುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.