ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಅರ್ಧ ಬೆಲೆಗೆ ಬೇಳೆ ಕಾಳು, ಆನ್ ಲೈನ್ ಮೂಲಕ ಪಡಿತರ ಚೀಟಿ, ನ್ಯಾಯಬೆಲೆ ಅಂಗಡಿಗಳಲ್ಲಿ ಕೂಪನ್ ವಿತರಿಸುವ ಸೌಲಭ್ಯಕ್ಕೆ ರಾಜ್ಯ ಸರ್ಕಾರ ಮಂಗಳವಾರ ಚಾಲನೆ ನೀಡಿದೆ.
ನಮ್ಮ ಸರ್ಕಾರ ಕರ್ನಾಟಕವನ್ನು ಹಸಿವು ಮುಕ್ತ ಮಾಡಲು ಬದ್ಧವಾಗಿದ್ದು ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಉಚಿತವಾಗಿ ಆಹಾರ ಧಾನ್ಯ ನೀಡಲಾಗುತ್ತಿದೆ. ಪೌಷ್ಠಿಕಾಂಶ ಇರುವ ತೊಗರಿ ಬೇಳೆಯನ್ನು ಫಲಾನುಭವಿಗಳಿಗೆ ಅರ್ಧ ಬೆಲೆಗೆ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಹಳಷ್ಟು ಮಂದಿ ಪೌಷ್ಟಿಕಾಂಶ ಕೊರತೆ ಎದುರಿಸುತ್ತಿದ್ದಾರೆ. ಹೀಗಾಗಿ ಬೇಳೆ ನೀಡಲು ನಿರ್ಧರಿಸಲಾಗಿದೆ. ಮಕ್ಕಳಿಗೆ ಶಾಲೆಗಳಲ್ಲಿ ಹಾಲು ಕೊಡುತ್ತಿರುವುದರಿಂದ ಪೌಷ್ಟಿಕಾಂಶ ಕೊರತೆ ಪ್ರಮಾಣ ಕಡಿಮೆಯಾಗುತ್ತಿದೆ ಎಂದು ಹೇಳಿದರು.
ವಿಳಂಬ ತಪ್ಪಿಸುವ ಹಿನ್ನೆಲೆಯಲ್ಲಿ ಆನ್ ಲೈನ್ ಮೂಲಕ ಪಡಿತರ ಚೀಟಿ ವಿತರಿಸುವ ಸೌಲಭ್ಯ ಒದಗಿಸಲಾಗುತ್ತಿದೆ.
ಫಲಾನುಭವಿಗಳಿಗೆ ಯಾವುದೇ ಕಾರಣಕ್ಕೂ ಹಣ ಕೊಡಬೇಡಿ. ಆಹಾರ ಧಾನ್ಯಗಳನ್ನೇ ಕೊಡಿ ಎಂದು ಆಹಾರ ಸಚಿವರಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದರೆ 15 ದಿನದಲ್ಲಿ ಪಡಿತರ ಚೀಟಿ ಸಿಗಲಿದೆ. ವ್ಯವಸ್ಥೆ ಸರಳೀಕರಣ ಆಗಲಿ. ಆದರೆ ಅದರಿಂದ ಫಲಾನುಭವಿಗಳಿಗೆ ತೊಂದರೆ ಆಗಬಾರದು. ಎಲ್ಲ ಅರ್ಹರಿಗೂ ಪಡಿತರ ಚೀಟಿ ಸಿಗಬೇಕು ಎಂಬುದು ಸರ್ಕಾರದ ಉದ್ದೇಶ ಎಂದರು.
ಯೂನಿಟ್ ಗೆ 5 ಕೆ.ಜಿ. ಪ್ರಕಾರ ಈಗ ಅಕ್ಕಿ ನೀಡಲಾಗುತ್ತಿದೆ. ಏಪ್ರಿಲ್ ಒದರಿಂದ ಅದನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ತಿಳಿಸಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos