ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದಾಗಿ ಜಲ ಸಂಪನ್ಮೂಲ ಸಚಿವ ಎಂ.ಬಿ ಪಾಟೀಲ ಹೇಳಿದ್ದಾರೆ. ದಿನನಿತ್ಯದ ಆಧಾರದ ಮೇಲೆ ಇದುವರೆಗೂ 4 ಸಾವಿರ ಕ್ಯೂಸೆಕ್ಸ್ ನೀರು ಹರಿಸಲಾಗಿದೆ ಎಂದು ಹೇಳಿದ್ದಾರೆ.
ಸಣ್ಣ ತಪ್ಪು ದೊಡ್ಡ ಅನಾಹುತಕ್ಕೆ ಕಾರಣವಾಗುವ ಅಪಾಯ ಇರುವುದರಿಂದ ಅನಿವಾರ್ಯವಾಗಿ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಕಾವೇರಿ ನ್ಯಾಯಮಂಡಳಿ ಐತೀರ್ಪಿನಂತೆ ಕಾವೇರಿ ನದಿಪಾತ್ರದ ಜಲಾಶಯಗಳಿಗೆ ಜೂನ್ನಲ್ಲಿ 34 ಟಿಎಂಸಿ ಅಡಿ ನೀರು ಬಂದರೆ 11 ಟಿಎಂಸಿ ಅಡಿ ನೀರು ಬಿಡಬೇಕು. ಜೂನ್ನಲ್ಲಿ ಕೇವಲ 11.6 ಟಿಎಂಸಿ ಅಡಿ ನೀರು ಹರಿದು ಬಂದಿದ್ದು, ಅಲ್ಪ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಕಾವೇರಿ ನದಿ ಪಾತ್ರದ ಜಲಾಶಯಗಳಿಗೆ ಸದ್ಯ 12,700 ಕ್ಯುಸೆಕ್ (ಈ ಪ್ರಮಾಣದ ನೀರು 24 ಗಂಟೆ ನಿರಂತರ ಹರಿದರೆ ಸುಮಾರು 1.2 ಟಿಎಂಸಿ ಅಡಿಯಷ್ಟು) ನೀರಿನ ಒಳಹರಿವು ಇದೆ. ಇದರಲ್ಲಿ 4,000 ಕ್ಯುಸೆಕ್ (ಇಷ್ಟು ನೀರು 24 ಗಂಟೆ ನಿರಂತರ ಹರಿದರೆ ಸುಮಾರು 0.35ಟಿಎಂಸಿ ಅಡಿಯಷ್ಟು) ನೀರನ್ನು ಹೊರಬಿಡಲಾಗುತ್ತಿದೆ ಎಂದು ಅವರು ವಿವರಿಸಿದರು.
ಮಳೆಗಾಲ ಆರಂಭವಾದ ಮೊದಲ ನಾಲ್ಕು ತಿಂಗಳಿನಲ್ಲಿ ತಮಿಳುನಾಡಿಗೆ 134 ಟಿಎಂಸಿ ಅಡಿ ನೀರು ಬಿಡಬೇಕು ಎಂದು ನ್ಯಾಯಮಂಡಳಿ ಆದೇಶಿಸಿದೆ. ಮಳೆ ಬಾರದೇ ಇದ್ದರೂ ಇಷ್ಟು ಪ್ರಮಾಣದ ನೀರು ಬಿಡಲೇಬೇಕಾಗಿದೆ. ಇದನ್ನು ಮರು ಪರಿಶೀಲಿಸುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಹಾಗೂ ನ್ಯಾಯಮಂಡಳಿ ಮೊರೆ ಹೋಗಿದೆ.
ಕೋರ್ಟ್ನಲ್ಲಿ ಈ ವಿಷಯ ವಿಚಾರಣೆಗೆ ಬಂದಾಗ ಸಮಸ್ಯೆಯಾಗಬಾರದು ಎಂಬ ಕಾರಣಕ್ಕೆ ಒಳಹರಿವು ಆಧರಿಸಿ ಅಲ್ಪ ಪ್ರಮಾಣದ ನೀರನ್ನು ತಮಿಳುನಾಡಿಗೆ ಬಿಡಲಾಗುತ್ತಿದೆ ಎಂದು ಸಚಿವರು ಸಮರ್ಥಿಸಿಕೊಂಡರು.
ತಮಿಳುನಾಡು ವಿರೋಧ ಮಾಡಿದರೂ ಮೇಕೆದಾಟು ಯೋಜನೆಯನ್ನು ಸರ್ಕಾರ ಅನುಷ್ಠಾನ ಮಾಡಲಿದೆ ಎಂದು ಪಾಟೀಲ ಹೇಳಿದರು. ಯೋಜನೆಗೆ ಅನುಮತಿ ಕೋರಿ ಸದ್ಯವೇ ಕೇಂದ್ರ ಪರಿಸರ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಸೂಕ್ತ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಹಾಗೂ ನ್ಯಾಯಮಂಡಳಿ ಗಮನಕ್ಕೂ ತರಲಾಗುವುದು ಎಂದು ಅವರು ಹೇಳಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos