ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಳೆದ 10-15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸುಮಾರು 4,000 ಕ್ಕೂ ಹೆಚ್ಚು ಕಿರಿಯ ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ.
ಕಾಲೇಜಿಯೇಟ್ ಶಿಕ್ಷಣ ಇಲಾಖೆಯ ಆಯುಕ್ತ ಎಂಎನ್ ಅಜಯ್ ನಾಗಭೂಷಣ್ ಈ ಬಗ್ಗೆ ಮಾಹಿತಿ ನೀಡಿದ್ದು, ಒಮ್ಮೆ ಪೂರ್ಣಾವಧಿ ಉಪನ್ಯಾಸಕರನ್ನು ನೇಮಕ ಮಾಡಿಕೊಂಡ ಬಳಿಕ 4,000 ಕ್ಕೂ ಹೆಚ್ಚಿರುವ ಅತಿಥಿ ಉಪನ್ಯಾಸಕರನ್ನು ತೆಗೆದುಹಾಕಲಾಗುತ್ತದೆ ಎಂದು ಹೇಳಿದ್ದಾರೆ.
2,160 ಪೂರ್ಣಾವಧಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಒಮ್ಮೆ ನೇಮಕವಾದ ಬಳಿಕ ಕ್ರಮೇಣ ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳಲಿದ್ದಾರೆ. ಅತಿಥಿ ಉಪನ್ಯಾಸಕರು ಕಳೆದ 10-15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಈಗ ಏಕಾಏಕಿ ಅವರನ್ನು ತೆಗೆದುಹಾಕಿದರೆ ತೀವ್ರ ಸಂಕಷ್ಟ ಎದುರಿಸಲಿದ್ದಾರೆ ಎಂಬ ಕೂಗು ಕೇಳಿಬಂದಿದ್ದು, ಅತಿಥಿ ಉಪನ್ಯಾಸಕರನ್ನು ತೆಗೆದುಹಾಕುವುದನ್ನು ವಿರೋಧಿಸಿ ವಿಧಾನಸೌಧ ಚಲೋ ಪ್ರತಿಭಟನೆ ನಡೆಸಲು ಅತಿಥಿ ಉಪನ್ಯಾಸಕರು ಉದ್ದೇಶಿಸಿದ್ದಾರೆ ಎಂದು ತಿಳಿದುಬಂದಿದೆ.