ಬೆಂಗಳೂರು: ಸುಮಾರು 6 ತಿಂಗಳ ಬಳಿಕ ಬೆಂಗಳೂರು ಮತ್ತು ಮೈಸೂರು ವಿಶ್ವವಿದ್ಯಾಲಯಗಳಿಗೆ ಖಾಯಂ ಉಪ ಕುಲಪತಿಗಳ ನೇಮಕವಾಗಲಿದೆ.
ಮೊನ್ನೆ ಶುಕ್ರವಾರ ಸಂಜೆ ಉಪ ಕುಲಪತಿಗಳ ಹೆಸರಿನ ಶಿಫಾರಸು ಪತ್ರ ಮುಖ್ಯಮಂತ್ರಿ ಕಚೇರಿಯಿಂದ ಅಂಕಿತಕ್ಕೆ ರಾಜಭವನಕ್ಕೆ ತಲುಪಿದೆ. ರಾಜಭವನದ ಮೂಲಗಳ ಪ್ರಕಾರ, ಎರಡೂ ವಿಶ್ವವಿದ್ಯಾಲಯಗಳಿಗೆ ಹೊಸ ಉಪ ಕುಲಪತಿಗಳ ನೇಮಕಕ್ಕೆ ರಾಜ್ಯಪಾಲ ವಜುಭಾಯಿ ವಾಲಾ ಆದೇಶವನ್ನು ಹೊರಡಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ, ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಉಪ ಕುಲಪತಿ ನೇಮಕಕ್ಕೆ ಶೋಧನಾ ಸಮಿತಿ ಶಿಫಾರಸು ಮಾಡಿದ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಸಂಗಮೇಶ್ ಪಾಟೀಲ್ ಅವರನ್ನು ನೇಮಕ ಮಾಡಲು ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದಾರೆ. ಇನ್ನು ಮೈಸೂರು ವಿಶ್ವವಿದ್ಯಾಲಯಕ್ಕೆ ಅದೇ ವಿ.ವಿಯ ಕನ್ನಡ ಪ್ರಾಧ್ಯಾಪಕ ಪ್ರೊ.ಸಿದ್ದಶ್ರಾಮ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ ಎಂದು ತಿಳಿದುಬಂದಿದೆ.